ಯಾದಗಿರಿ: ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇಡೀ ಜಿಲ್ಲೆಯ ಜನ ಮಮ್ಮಲ ಮರಗುತ್ತಿದ್ದಾರೆ.
ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಸಾವನ್ನಪ್ಪಿದ ದುರ್ದೈವ ಮಕ್ಕಳು. ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಓಡೋಡಿ ಹೋದ ಗ್ರಾಮಸ್ಥರು ಶವ ಹೊರಗೆ ತೆಗೆದಿದ್ದಾರೆ. ಸ್ಥಳದಲ್ಲಿ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.