ರಾಜ್ಯದಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಬರ ಘೋಷಣೆಗೆ ಮುನ್ನ ಕೇಂದ್ರದ ಮಾನದಂಡದಂತೆ ಮಾಸಾಂತ್ಯದೊಳಗೆ ಬೆಳೆ ಸಮೀಕ್ಷೆ ನಡೆಸಿ ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮಂಗಳವಾರ (ಆಗಸ್ಟ್ 22) ಹೇಳಿದ್ದಾರೆ.
ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಪ್ರಕೃತಿ ವಿಕೋಪದಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿದ ನಂತರ ಕಂದಾಯ ಸಚಿವರಾದ ಕೃಷ್ಣಾ ಬೈರೇಗೌಡ ಹಾಗೂ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಒದಗಿಸಿದರು.
ರಾಜ್ಯದ 27 ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದೆ ಮುಂದಿನ ಒಂದೆರೆಡು ದಿನ ಹೀಗೆ ಪರಿಸ್ಥಿತಿ ಮುಂದುವರೆದರೆ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ ಅದನ್ನು ನಿಭಾಯಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.
ಸುಮಾರು 170 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ಇದೆ.ಬೆಳೆ ಒಣಗುತ್ತಿವೆ,
ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. 2016 ಹಾಗೂ 2020ರ ಮಾರ್ಗಸೂಚಿ ಅನ್ವಯ ಬರ ಘೋಷಣೆಗೆ ಮೊದಲು ಕೆಲವೊಂದು ಮಾನದಂಡಗಳನ್ನು ಪರಿಗಣಿಸಲೇಬೇಕಾಗಿದೆ.
ಹಾಗಾಗಿ ನಾಳೆಯಿಂದಲೇ ಈ ಎಲ್ಲಾ ಜಿಲ್ಲೆಗಳ 121ತಾಲ್ಲೂಕುಗಳಲ್ಲಿ (ಗ್ರೌಡ್ ಟ್ರುಥ್ /ವೆರಿಫಿಕೇಷನ್ ಗಾಗಿ) ಬೆಳೆ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿ ಮೂಲಕ ವರದಿ ಪಡೆಯಲಾಗುವುದು ಎಂದು ಸಚಿವರು ಹೇಳಿದರು. ಸಭೆಯಲ್ಲಿ ಹವಾಮಾನ ವರದಿ,ಮಳೆ ಕೊರತೆ, ಬೆಳೆ ಪರಿಸ್ಥಿತಿ, ಮೇವಿನ ಲಭ್ಯತೆ, ಜಲಾಶಯದ ನೀರಿನ ಸಂಗ್ರಹ, ಕುಡಿಯುವ ನೀರಿನ ಪರಿಸ್ಥಿತಿ ಕುರಿತು ವಾಸ್ತವ ಅಂಶಗಳು ಹಾಗೂ ಮಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ.ಜಿಲ್ಲಾಧಿಕಾರಿಯವರ ವರದಿ ನಂತರ ಪುನಹ ಉಪ ಸಮತಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.