ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್ ಸಂಸ್ಥೆಯ ಕಾವೇರಿ ಕಾಲಿಂಗ್ ಯೋಜನೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವುದನ್ನು ನಿರ್ಬಂಧಿಸುವಂತೆ ಕೋರಿದ್ದ ಮನವಿಯನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಅರ್ಜಿದಾರ ಎ ವಿ ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪು ಕಾಯ್ದಿರಿಸಿದ್ದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠವು ಗಿಡ ನೆಡುವ ಸಂಬಂಧದ ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಮೆಚ್ಚುಗೆಯನ್ನೂ ಸೂಚಿಸಿದೆ.
“ಮೇಲೆ ಹೇಳಲಾದ ಪ್ರಕರಣದಲ್ಲಿ ಅರಣ್ಯ ನಾಶದಿಂದ ಸಂಭವಿಸುತ್ತಿರುವ ವಿಪತ್ತು ಹಾಗೂ ಅರಣ್ಯದ ಅಗತ್ಯತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾಗಿ ಚರ್ಚಿಸಿದೆ. ಹೀಗಾಗಿ, ಮಾನವ ಕುಲ ಮತ್ತು ಭೂಮಿಯನ್ನು ರಕ್ಷಿಸಲು ಇರುವ ಏಕೈಕ ಅವಕಾಶ ಅರಣ್ಯೀಕರಣ. ಈ ನೆಲೆಯಲ್ಲಿ ಮೂರನೇ ಪ್ರತಿವಾದಿಯಾದ ಇಶಾ ಔಟ್ರೀಚ್ ಕೈಗೊಂಡಿರುವ ಅರಣ್ಯೀಕರಣದ ಕಾರ್ಯಕ್ರಮಕ್ಕೆ ನಾವು ಮೆಚ್ಚುಗೆಯನ್ನು ದಾಖಲಿಸಬೇಕಾಗುತ್ತದೆ. ಇದನ್ನು ಪ್ರಶ್ನಿಸಿರುವ ಅರ್ಜಿ ವಜಾಕ್ಕೆ ಅರ್ಹವಾಗಿದೆ” ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮುಂದುವರೆದು ಮನವಿಯನ್ನು ಕ್ಷುಲ್ಲಕ ಎಂದಿರುವ ಪೀಠವು ನ್ಯಾಯಾಲಯದ ಮಧ್ಯಪ್ರವೇಶದ ಅಗತ್ಯತೆ ಇರಲಿಲ್ಲ ಎಂದು ಹೇಳಿದೆ. ಕಳೆದ ಬುಧವಾರ ವಾದ – ಪ್ರತಿವಾದವನ್ನು ಆಲಿಸಿದ್ದ ಪೀಠವು ತೀರ್ಪು ಕಾಯ್ದಿರಿಸಿತ್ತು.
ಕಾವೇರಿ ಕಾಲಿಂಗ್ ಯೋಜನೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸದಂತೆ ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ಗೆ ನಿರ್ದೇಶಿಸುವಂತೆ ಕೋರಿದ್ದ ಮನವಿಗೆ ಸಂಬಂಧಿಸಿದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 1 2021ರಂದು ಕಾಯ್ದಿರಿಸಿತ್ತು.
Also read: `ಕಾವೇರಿ ಕೂಗು’ ಅಭಿಯಾನದ ಲೆಕ್ಕ ಕೊಡಿ
ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ “ಕಾವೇರಿ ಕಾಲಿಂಗ್” ಯೋಜನೆಯನ್ನು ಸರ್ಕಾರಿ ಯೋಜನೆ ಎಂದು ಬಿಂಬಿಸುವ ಮೂಲಕ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿದೆಯೇ ಅಥವಾ ಇಲ್ಲವೇ ಎನ್ನುವುದನ್ನು ತಿಳಿಯಲು ತನಿಖೆಯು ಅಗತ್ಯವಾಗಬಹುದು ಎಂದು ಕರ್ನಾಟಕ ಹೈಕೋರ್ಟ್ ಫೆಬ್ರವರಿ 23 2021 ರಂದು ಅಭಿಪ್ರಾಯಪಟ್ಟಿತ್ತು.
Also Read: `ಕಾವೇರಿ ಕೂಗು’ ರಾಜ್ಯ ಸರ್ಕಾರದ ಗಮನಕ್ಕೇ ಬಂದಿಲ್ಲವೇ?
ಕಳೆದ ವರ್ಷದ ಅಕ್ಟೋಬರ್ 15ರಂದು ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಾರ್ಚ್ನಲ್ಲಿ ಸುಪ್ರೀಂ ಕೋರ್ಟ್ಗೆ ಇಶಾ ಫೌಂಡೇಶನ್ ಮೇಲ್ಮನವಿ ಸಲ್ಲಿಸಿತ್ತು. ಅಂದು, ಹೈಕೋರ್ಟ್ ಇಶಾ ಫೌಂಡೇಶನ್ನ ಕಾವೇರಿ ಕಾಲಿಂಗ್ ಯೋಜನೆಯ ಕುರಿತಾದ ಮನವಿಯನ್ನು ಸ್ವಯಂಪ್ರೇರಿತ ಮನವಿ ಎಂದು ಪರಿಗಣಿಸಲು ನಿರ್ಧರಿಸಿತ್ತು.