ಬೆಂಗಳೂರು : ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸುವ ಮೂಲಕ ಅಲ್ಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ಈ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಸೆಲ್ನಲ್ಲಿ ಅಕ್ರಮ ಮೊಬೈಲ್ ಪತ್ತೆಯಾಗಿದೆ. ಜೈಲಿನ ನಿಮಯಗಳನ್ನು ಖೈದಿಗಳು ಅನುಸರಿದೆ ಇರುವುದು ಕಂಡು ಬಂದಿದೆ.

ಪರಪ್ಪನ ಅಗ್ರಹಾರ ಜೈಲಿನ ಅವ್ಯಸವ್ಥೆಯ ವಿರುದ್ಧ ಕೆಂಡಾಮಂಡಲರಾಗಿರುವ ಡಿಜಿಪಿ ಅಲೋಕ್ ಕುಮಾರ್ ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅವರನ್ನು ಸಸ್ಪೆಂಡ್ ಮಾಡುವ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಪ್ರಮುಖವಾಗಿ ಪ್ರಜ್ವಲ್ ರೇವಣ್ಣ ಇದ್ದ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆಯನ್ನು ಉಡುತ್ತಿರಲಿಲ್ಲ. ದಾಳಿಯ ವೇಳೆ ಒಟ್ಟಾರೆ 10ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ದಾಳಿಯ ಭಾಗವಾಗಿ ಬೆಂಗಳೂರು ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ಗೆ ಶೋ-ಕಾಸ್ ನೋಟೀಸ್ ನೀಡಲಾಗಿದೆ.
ಮೊಬೈಲ್ ಫೋನ್ ಹೇಗೆ ತಲುಪಿತು…?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೈಲಿನೊಳಗೆ ಮೊಬೈಲ್ ಫೋನ್ ಹೇಗೆ ತಲುಪಿತು ಮತ್ತು ಇದರ ಹಿಂದೆ ಯಾರ ಪಾತ್ರವಿದೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಬಿಡದಿ ಟೌನ್ಶಿಪ್ ಜಟಾಪಟಿ: ಜೆಡಿಎಸ್ ಪಾದಯಾತ್ರೆಗೆ ಯೂತ್ ಕಾಂಗ್ರೆಸ್ ಸ್ಟಿಕರ್ ದಾಳಿ!
ಜೈಲಿನ ಚಟುವಟಿಕೆಗಳ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಆರೋಪದ ಮೇರೆಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ 80ಕ್ಕೂ ಹೆಚ್ಚು ಮಂದಿ ಅಧಿಕಾರಿ – ಸಿಬ್ಬಂದಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್ಗಳನ್ನು ಜಪ್ತಿ ಮಾಡಿಕೊಂಡಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರಾಯ್ ವಿರುದ್ಧ ಪ್ರಿಸನ್ಸ್ ಆಕ್ಟ್ ಸೆಕ್ಷನ್ 42 ಅಡಿ FIR ದಾಖಲಾಗಿದೆ (ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಇಟ್ಟುಕೊಳ್ಳುವುದು) ಎನ್ನಲಾಗುತ್ತಿದೆ.






