ವಿಜಯಪುರ: ಬಡವರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಕೊಡಲು ಕಾಂಗ್ರೆಸ್ ಸರಕಾರ ಬದ್ಧವಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರಕಾರವು ರಾಜಕೀಯ ಮಾಡುತ್ತಿದ್ದು, ಬಡವರ ವಿರೋಧಿಯಂತೆ ವರ್ತಿಸುತ್ತಿದೆ. ಹೀಗಾಗಿ ಸ್ವಲ್ಪ ತಡವಾಗಿಯಾದರೂ ಸರಿಯೇ, ಅನ್ನಭಾಗ್ಯ ಯೋಜನೆ ಜಾರಿಗೆ ಬಂದೇಬರುತ್ತದೆ ಎಂದು ಭಾರೀ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ರು..
ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅಕ್ಕಿ ಖರೀದಿಗೆ ಸಂಬಂbjpಧಿಸಿದಂತೆ ರಾಜ್ಯ ಸರಕಾರವು ಮೊದಲಿನಿಂದಲೂ ಕೇಂದ್ರ ಸರಕಾರದೊಂದಿಗೆ ವ್ಯವಹರಿಸುತ್ತಲೇ ಇದೆ. ಮೊದಲು ಕೇಂದ್ರ ಸರಕಾರ ಕೂಡ ತನ್ನಲ್ಲಿ 7.5 ಲಕ್ಷ ಟನ್ ಅಕ್ಕಿ ದಾಸ್ತಾನಿದ್ದು, ರಾಜ್ಯಕ್ಕೆ ಅಗತ್ಯವಿರುವಷ್ಟು ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಈಗ ಅದು ತದ್ವಿರುದ್ಧ ಧೋರಣೆ ತಾಳಿದೆ. ನಾವೇನೂ ಅವರನ್ನು ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಳಿರಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರೀ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ಬೆಳವಣಿಗೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಸಮಗ್ರ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಇದು ಈ ತಿಂಗಳಲ್ಲಿ ಅಂತಿಮ ರೂಪ ಪಡೆಯಲಿದೆ. ಬಳಿಕ, ಜುಲೈ ತಿಂಗಳಲ್ಲಿ ದೆಹಲಿಗೆ ತೆರಳಿ, ಕೇಂದ್ರ ಕೈಗಾರಿಕಾ ಸಚಿವರ ಜತೆ ಕೂಲಂಕಷವಾಗಿ ಚರ್ಚಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರವನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಸ್ಪಷ್ಟ ಕಲ್ಪನೆ ಸರಕಾರಕ್ಕಿದೆ. ಹಾಗೆಯೇ ಕೇಂದ್ರದಿಂದ ನಮಗೆ ದೊರೆಯಬಹುದಾದ ಸಹಾಯ ಮತ್ತು ನಮ್ಮಲ್ಲಿ ಯಾವ್ಯಾವ ಉದ್ದಿಮೆಗಳಿಗೆ ಹೇರಳ ಅವಕಾಶಗಳಿವೆ ಎನ್ನುವುದನ್ನೆಲ್ಲ ಚರ್ಚಿಸಲಾಗುವುದು. ಇದರಿಂದ ರಾಜ್ಯದ ಎಲ್ಲೆಡೆಗಳಲ್ಲೂ ಉದ್ದಿಮೆಗಳು ಬರಲು ಸಹಾಯವಾಗಲಿದೆ ಎಂದು ಎಂ.ಬಿ.ಪಾಟೀಲ್ ನುಡಿದರು.