ಕೋವಿಡ್ 2ನೇ ಅನ್ನು ದೇಶದಲ್ಲಿ ನಿಯಂತ್ರಿಸುವುದು ಕಷ್ಟಸಾಧ್ಯವಾಗುತ್ತಿದೆ. ಇದಕ್ಕೆ ಕಾರಣ ಆಡಳಿತಗಾರರ ನಿರ್ಲಕ್ಷ್ಯ ಹಾಗು ಹದಗೆಟ್ಟಿರುವ ವೈದ್ಯಕೀಯ ವ್ಯವಸ್ಥೆಯೆಂಬುದು ಸಾರ್ವಜನಿಕರ ಆರೋಪವಾಗಿದೆ. ಹಲವು ರಾಜ್ಯಗಳಲ್ಲಿ ಸೋಂಕಿತರಿಗೆ ಆಕ್ಸಿಜನ್ ಸಿಗದೆ ಅಮಾಯಕ ಜೀವಗಳು ಬಲಿಯಾಗುತ್ತಿರುವ ಬಗ್ಗೆ ವರದಿಯಾಗುತ್ತಿರುವ ಬೆನ್ನಲೆ, ಕರ್ನಾಟಕದ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಅಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು ಎಂದು ಮೃತರ ಶೋಕತಪ್ತ ಕುಟುಂಬಗಳಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದು ಸಿಎಂ ಬಿಎಸ್ವೈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ರಾಜ್ಯದ ಬಿಜೆಪಿ ಸರ್ಕಾರದ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.