2ನೇ ಆಷಾಢ ಶುಕ್ರವಾರದ ಹಿನ್ನೆಲೆ ನಾಡ ಅಧಿದೇವತೆಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ನಾಡ ಅಧಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂತು. ಇಂದು ಆಷಾಢ ಮಾಸದ 2ನೇ ಶುಕ್ರವಾರ ನಾಡ ಅಧಿದೇವತೆ ದರ್ಶನ ಪಡೆಯಲು ಬೆಳಗ್ಗೆಯಿಂದಲೇ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದರ್ಶನ ಪಡೆದರು. ಬಳಿಕ ದೇವಾಲಯದ ಆವರಣದಲ್ಲಿ ಭಕ್ತರು ಪ್ರಸಾದ್ ಸೇವಿಸಿದರು.
2ನೇ ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಒಳಭಾಗದ ಆವರಣದಲ್ಲಿ ವಿವಿಧ ಬಗೆಯ ಹೂ, ತರಕಾರಿ ಹಾಗೂ ಹಣ್ಣುಗಳಿಂದ ವಿಶೇಷ ಅಲಂಕಾರ ಮಾಡಿ ಪೂಜೆ ಮಾಡಲಾಗಿತ್ತು. ಬೆಳಗ್ಗೆ 3.30 ರಿಂದಲೇ ದೇವಾಲಯದ ಒಳಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಮಹಾ ಮಂಗಳಾರತಿ ನೆರೆವೇರಿಸಿದ ಬಳಿಕ 5.30 ಕ್ಕೆ ಬೆಳಗ್ಗೆ ದೇವಾಲಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿ ಕೊಡಲಾಯಿತು.
ಆಷಾಢ ಮಾಸದಲ್ಲಿ ಶಕ್ತಿ ದೇವತೆ ಚಾಮುಂಡೇಶ್ವರಿಯನ್ನ ಪೂಜೆ ಮಾಡಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ನಂಬಿಕೆಯಿಂದ ಭಕ್ತರು ಆಷಾಢ ಮಾಸದಲ್ಲಿ ದೇವಿಗೆ ಪೂಜೆ ಸಲ್ಲಿಸುತ್ತಾರೆ.