ವಿವಿಧ ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡದಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬ್ಯಾಂಕ್ಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.
ಪ್ರಧಾನಮಂತ್ರಿ ಸ್ವನಿಧಿ, ಪ್ರಧಾನಮಂತ್ರಿ ಆವಾಸ್ ಮತ್ತು ಮುಖ್ಯಮಂತ್ರಿಯವರ ಒಂದು ಲಕ್ಷ ಮನೆಗಳ ಯೋಜನೆ ಕುರಿತಂತೆ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆವಾಸ್, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಸೇರಿದಂತೆ ನಗರ ಪ್ರದೇಶಗಳಲ್ಲಿನ ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ. ಹಾಗೂ ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡದಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯಮಂತ್ರಿಯೊಂದಿಗಿನ ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ‘ವಸತಿ ಯೋಜನೆಗಳ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಬ್ಯಾಂಕುಗಳು ಸದಾ ತಕರಾರು ತೆಗೆಯುತ್ತಿದ್ದವು. ಇನ್ನು ಮುಂದೆ ಫಲಾನುಭವಿಯ ಆಧಾರ್ ಕಾರ್ಡ್ ಹಾಗೂ ಹಕ್ಕುಪತ್ರದ ಆಧಾರದಲ್ಲಿ ಸಾಲ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಇತರ ನಗರ ಪ್ರದೇಶಗಳಲ್ಲಿ ಪ್ರತಿ ಫಲಾನುಭವಿಗೆ ₹2.5 ಲಕ್ಷ ಮತ್ತು ಬೆಂಗಳೂರಿನಲ್ಲಿ ಹೆಚ್ಚಿನ ಮೊತ್ತದ ಸಾಲ ಮಂಜೂರು ಮಾಡುವಂತೆ ಸೂಚನೆ ನೀಡಲಾಗಿದೆ. ಒಟ್ಟು 3.40 ಲಕ್ಷ ಫಲಾನುಭವಿಗಳಿಗೆ ಸಾಲ ದೊರೆಯಲಿದೆ. ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆಯಲ್ಲಿ ಈಗಾಗಲೇ 53,000 ಮನೆಗಳ ನಿರ್ಮಾಣ ಆರಂಭವಾಗಿದೆ. ಜೂನ್ ನಲ್ಲಿ ಮೊದಲ ಹಂತದಲ್ಲಿ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು ಎಂದು ಸೋಮಣ್ಣ ತಿಳಿಸಿದ್ದಾರೆ.