ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಎದ್ದಿದ್ದ ಸಿಎಂ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.
ತಮ್ಮ ಸರ್ಕಾರಕ್ಕೆ ಎರಡನೇ ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ತಮ್ಮ ರಾಜಕೀಯ ಜೀವನವನ್ನು ಭಾವನಾತ್ಮಕವಾಗಿ ನೆನೆದ ಯಡಿಯೂರಪ್ಪ ಅವರು, ತಾನು ಅಧಿಕಾರ ಸ್ವೀಕರಿಸಕೊಂಡಾಗಿನಿಂದ ಹಲವಾರು ಸವಾಲುಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ.
ಇಬ್ಬರು ಶಾಸಕರಿಂದ ಆರಂಭವಾದ ನಮ್ಮ (ಬಿಜೆಪಿ) ಸಾಧನೆ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಷ್ಟು ಬೆಳೆದಿದೆ. ಈ ಸಾಧನೆಗೆ ಲಕ್ಷಾಂತರ ಜನ ಕಾರ್ಯಕರ್ತರ ಪರಿಶ್ರಮ ಕಾರಣ ಎಂದು ಅವರು ಹೇಳಿದ್ದಾರೆ.
75 ವರ್ಷ ಮೀರಿದ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಆದರೆ, ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಬರುವ ದಿನಗಳಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಸಿಗಬೇಕು ಎಂದು ದೇವರಲ್ಲಿ ಈ ಬಗ್ಗೆ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕುಮಾರಸ್ವಾಮಿ ಜೊತೆಗಿನ ಮೈತ್ರಿ ಸರ್ಕಾರವನ್ನು ನೆನಪಿಸಿಕೊಂಡ ಬಿಎಸ್ವೈ, ಆ ವೇಳೆ ದೇವೇಗೌಡರು ಹಾಗೂ ಕುಮಾರಸ್ವಾಮಿ ನನಗೆ ಷರತ್ತು ವಿಧಿಸಿದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದೆ ಎಂದೂ ಹೇಳಿದ್ದಾರೆ.
ತಮ್ಮ ಸುದೀರ್ಘ ರಾಜಕೀಯ ಇತಿಹಾಸವನ್ನು ಮೆಲುಕು ಹಾಕಿದ ಯಡಿಯೂರಪ್ಪ, ಇಂದು (ಸೋಮವಾರ) ಮಧ್ಯಾಹ್ನ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.