ಪ್ರಧಾನಿ ನರೇಂದ್ರ ಮೋದಿ ಇಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಸವಾಲಿನ ಸ್ವಾಗತ ನೀಡಲು ಮುಂದಾಗಿದ್ದಾರೆ. ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರ ಮಾಡ್ತಿರುವ ಅನ್ಯಾಯಗಳನ್ನು ಪದೇ ಪದೇ ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ಕೊಡಬೇಕಾದವರು ಪ್ರಧಾನಿ ನರೇಂದ್ರ ಮೋದಿಯೇ ಹೊರತು, ಬಿಜೆಪಿ ಐಟಿ ಸೆಲ್ನ ಹುಡುಗರಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ಒಪ್ಪುವ ದಿನ ಮತ್ತು ಸ್ಥಳ ನಿಗದಿಪಡಿಸಿದರೇ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ದ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಮೂಲಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಇದಕ್ಕೂ ಮೊದಲು ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚಿಸಲಿ ಎಂದಿದ್ದರು ಬಸವರಾಜ ಬೊಮ್ಮಾಯಿ.
![](https://pratidhvani.com/wp-content/uploads/2024/01/1stgbbq_siddaramaiah_625x300_29_December_23-2-1024x630.png)
ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇಕಡ 4.72 ತೆರಿಗೆ ಪಾಲನ್ನು ಕಡಿಮೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇಕಡ 3.64ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರ ಗಳಿಕೆಯಿಂದ ಕಟ್ಟಿದ್ದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಅನುದಾನವನ್ನು 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
![](https://pratidhvani.com/wp-content/uploads/2024/01/vijaykarnataka-2-1-1024x768.webp)
ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಈ ಶಿಫಾರಸ್ಸನ್ನು ತಿರಸ್ಕರಿಸಿದ್ದರು. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಏಮ್ಸ್ ಸಂಸ್ಥೆ ಬೇಕು ಅನ್ನೋ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ.
ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರೂಪಾಯಿ ಯೋಜನೆಯ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ್ಳಲಾಗಿದೆ. ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ..? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ..? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ..? ಎಂದು ಕೌಂಟರ್ ಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ.