ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದೆ.
ಈ ಕುರಿತು ಗುರುವಾರ ವಿಶೇಷ ಜಂಟಿ ಸುದ್ದಿಗೋಷ್ಠಿಯನ್ನು ಕರೆದ ಕಾಂಗ್ರೆಸ್ ನಾಯಕರು ಇದಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಬಿಎಂಪಿ, ಅಧಿಕಾರಿಗಳು, ಹಾಗೂ ರಾಜ್ಯ ಚುನಾವಣಾ ಆಯೋಗವೇ ನೇರ ಹೊಣೆ ಎಂದು ಆರೋಪಿಸಿದೆ.
ಈಗಾಗಲೇ ಹಗರಣ ಬಯಲಾಗಿದೆ ಚಿಲುಮೆ ಸಂಸ್ಥೆಯ ಅಧಿಕಾರಿಗಳು ಚುನಾವಣಾ ಆಯೋಗದ ಅಧಿಕಾರಿಗಳಂತೆ ನಟಿಸಿದ್ದಾರೆ ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಈ ವಿಚಾರವಾಗಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಶಾಸಕರು ಉಪಸ್ಥಿತರಿದ್ದರು.