ಜೈಪುರ: ಕಳೆದ ವರ್ಷದ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ ಸಿಂಗ್ ದೋಸ್ತಾರಾಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಇದೇ ವೇಳೆ, ಇತ್ತೀಚೆಗೆ ಹೋಟೆಲ್ ಉದ್ಯಮಿಗಳ ಮೇಲೆ ನಡೆದ ಇ.ಡಿ. ದಾಳಿಗೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದ ಕುರಿತಾದ ವಿಚಾರಣೆಗೆ ಬರಬೇಕೆಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಪುತ್ರ ವೈಭವ್ ಗೆಹ್ಲೋಟ್ಗೂ ಸಮನ್ಸ್ ಜಾರಿ ಮಾಡಿದೆ.
ಮುಂದಿನ ತಿಂಗಳು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಕಾಂಗ್ರೆಸಿಗರಿಗೆ ಕಿರುಕುಳ ನೀಡಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಕಳೆದ ವರ್ಷ ರಾಜಸ್ಥಾನ ಪಬ್ಲಿಕ್ ಸರ್ವೀಸ್ ಕಮಿಷನ್ ಮೂಲಕ ಶಿಕ್ಷಕರ ನೇಮಕಾತಿ ಪರೀಕ್ಷೆ ನಿಗದಿಯಾಗಿತ್ತು. ಆ ವೇಳೆ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಆ ಸಂಬಂಧ ರಾಜಸ್ಥಾನ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ತನಿಖೆಯ ವೇಳೆ ಆರೋಪಿಗಳು ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೇಳಿದ್ದರು. ಪ್ರತಿ ಅಭ್ಯರ್ಥಿಯಿಂದ 8ರಿಂದ 10 ಲಕ್ಷ ರು. ಪಡೆದು ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದಾಗಿ ಆರೋಪಿ ಬಾಯಿಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಮಾಜಿ ಶಿಕ್ಷಣ ಸಚಿವರೂ ಆಗಿರುವ ದೋಸ್ತಾರಾ, ಕಾಂಗ್ರೆಸ್ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಸೇರಿದಂತೆ ಕೆಲವರ ಮನೆಗಳಲ್ಲಿ ಶೋಧ ನಡೆಸಲಾಗಿದೆ.