![](https://pratidhvani.com/wp-content/uploads/2024/05/1600x960_1368187-pralhad-joshi-1024x614.jpg)
ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ನೋಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದ ಸಚಿವರು, ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಸಚಿವ ಜೋಶಿ ಕಿಡಿಕಾರಿದರು.