ʼಇವತ್ತಿನಿಂದ ಇಲ್ಲಿ, ಹಳಬರು, ಹೊಸಬರು ಎಂಬ ಪ್ರಶ್ನೆ ಇಲ್ಲ. ಕಾಂಗ್ರೆಸ್ ದೇವಾಲಯಕ್ಕೆ ಬಂದು ಪಕ್ಷ ಸೇರಿರುವುದು ನಿಮ್ಮ ಭಾಗ್ಯ. ನಿಮ್ಮೆಲ್ಲರನ್ನೂ ಈ ಸಂದರ್ಭದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಎಲ್ಲರೂ ಒಟ್ಟಾಗಿ ಜನರ ಸೇವೆ ಮಾಡೋಣʼ ಎಂದು ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ಅನ್ಯಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಸುತ್ತಾ ಡಿಕೆ ಶಿವಕುಮಾರ್ ಶುಭಹಾರೈಸಿದ್ದಾರೆ.

ʼನಿಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿ ಯಾರೂ ಬೇಷರತ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ದುಡಿಯಲು ಬಯಸುತ್ತಾರೋ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾರ್ಯಕ್ರಮ ರೂಪಿಸಿ. ನಾನು ಅಥವಾ ಇತರ ನಾಯಕರನ್ನು ಆ ಕಾರ್ಯಕ್ರಮಕ್ಕೆ ಕಳುಹಿಸಿಕೊಡುತ್ತೇನೆ ಎಂದು ನಮ್ಮೂರ ನಾಯಕರುಗಳಿಗೆ ಹೇಳಲು ಬಯಸುತ್ತೇನೆʼ ಎಂದಿದ್ದಾರೆ.
ಮುಂದಿನ ಚುನಾವಣೆಯಲ್ಲಿ 130 ಕ್ಷೇತ್ರ ಗೆಲ್ಲುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗುರಿಯಾದರೆ ನಿಮ್ಮ ಗುರಿ ಏನು? ಎಂದು ಮಾಧ್ಯಮದವರು ಡಿಕೆ ಶಿವಕುಮಾರ್ ರವರೊಂದಿಗೆ ಪ್ರಶ್ನಿಸಿದಾಗ ʼರಾಜ್ಯದ 224 ಕ್ಷೇತ್ರಗಳಲ್ಲೂ ಗೆಲ್ಲುವುದು ನಮ್ಮ ಗುರಿʼ ಎಂದು ಉತ್ತರಿಸಿದ್ದಾರೆ.
ʼಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷವನ್ನು ಗೆಲ್ಲಿಸಬೇಕು. ಅದೇ ನಮ್ಮ ಗುರಿ. ನನ್ನ ಕ್ಷೇತ್ರದಲ್ಲಿ ಯಾರೋ ಬಿಜೆಪಿ ನಾಯಕರು ನಮ್ಮ ವಿರುದ್ಧ ಗೆಲ್ಲಲು ಪ್ರಯತ್ನಿಸಿದರೆ ತಪ್ಪಿಲ್ಲ. ದಳದವರು ಪ್ರಯತ್ನಿಸಿದರೆ ತಪ್ಪಿಲ್ಲ. ಹಾಗಂತ ನಾವು ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಉಪ ಮುಖ್ಯಮಮಂತ್ರಿಗಳ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡಲು ಸಾಧ್ಯವೇ? ಅಲ್ಲಿ ನಾವ್ಯಾಕೆ ಗೆಲ್ಲಬಾರದು? ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಹೀಗಾಗಿ 224 ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರಿಗೆ ಶಕ್ತಿ ಕೊಡುವ ಕೆಲಸ ಮಾಡುತ್ತೇವೆ. ಇದು ನಮ್ಮ ಗುರಿʼ ಎಂದು ತಿಳಿಸಿದ್ದಾರೆ.





