ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯ ಕಚೇರಿಯಿಂದ ನಿರ್ಗಮಿಸಿದರು. ಊಟದ ಬಳಿಕ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಮೊದಲ ಸುತ್ತಿನ ವಿಚಾರಣೆಯ ಸಂದರ್ಭದಲ್ಲಿ, ಗಾಂಧಿಯವರು ದೇಶದಲ್ಲಿರುವ ಮತ್ತು ಹೊರಗಿನ ಅವರ ಆಸ್ತಿ ಮತ್ತು ಬ್ಯಾಂಕ್ ಖಾತೆಗಳ ಬಗ್ಗೆ, “ವಿದೇಶದಲ್ಲಿರುವ ಅವರ ಆಸ್ತಿಯ ಬಗ್ಗೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿದ ಕೇಂದ್ರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ತೆಗೆದುಕೊಂಡರು. ಅಧೀರ್ ರಂಜನ್ ಚೌಧರಿ, ಕೆ.ಸಿ.ವೇಣುಗೋಪಾಲ್, ಹರೀಶ್ ರಾವತ್ ಅವರನ್ನು ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ದೀಪೇಂದರ್ ಹೂಡಾ, ಅಶೋಕ್ ಗೆಹ್ಲೋಟ್ ಅವರನ್ನು ಕೊಫ್ತೆಪುರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಇದೇ ಪ್ರಕರಣದಲ್ಲಿ ರಾಹುಲ್ ಹೊರತಾಗಿ ಅವರ ತಾಯಿ ಹಾಗೂ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಸಮನ್ಸ್ ನೀಡಲಾಗಿದೆ. ಅವರು ಜೂನ್ 23 ರಂದು ಹಣಕಾಸು ತನಿಖಾ ಸಂಸ್ಥೆಯ ಮುಂದೆ ಹಾಜರಾಗಲಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಲು ಸಿದ್ಧವಾಗುತ್ತಿದ್ದಂತೆ, ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯ ಹೊರಗೆ ಭಾರಿ ಪ್ರತುಭಟನೆ ವ್ಯಕ್ತವಾಯಿತು. ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 50 ರ ಅಡಿಯಲ್ಲಿ ಗಾಂಧಿಯವರ ಹೇಳಿಕೆಯನ್ನು ದಾಖಲಿಸಲಾಗುತ್ತದೆ. ಸಹಾಯಕ ನಿರ್ದೇಶಕರು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ಉಪ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ. ಇನ್ನೊಬ್ಬ ಅಧಿಕಾರಿ ಹೇಳಿಕೆಯನ್ನು ಟೈಪ್ ಮಾಡುತ್ತಾರೆ.