• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

ನಾ ದಿವಾಕರ by ನಾ ದಿವಾಕರ
February 22, 2022
in ಅಭಿಮತ
0
ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ
Share on WhatsAppShare on FacebookShare on Telegram

ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸಾರ್ವಜನಿಕ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕಾದ ವಿದ್ಯುನ್ಮಾನ ಮಾಧ್ಯಮಗಳ ಸ್ವರೂಪ ಹೇಗಿರಬೇಕು ? ಡಿಜಿಟಲೀಕರಣದತ್ತ ದಾಪುಗಾಲು ಹಾಕುತ್ತಿರುವ ಭಾರತದಲ್ಲಿ ಈ ಪ್ರಶ್ನೆ ಇನ್ನೂ ಹೆಚ್ಚು ಪ್ರಸ್ತುತ ಎನಿಸುತ್ತದೆ. ಮುದ್ರಣ ಮಾಧ್ಯಮ ಎಷ್ಟೇ ವ್ಯಾಪಕವಾದರೂ ಅದು ಅಕ್ಷರಸ್ತರನ್ನು ತಲುಪುವ ಒಂದು ಸಾಧನ. ಆದರೆ ದೃಶ್ಯ ಮಾಧ್ಯಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬಹುದಾದ ಒಂದು ಸಂವಹನ ಸಾಧನವಾಗಿದೆ. ಕಳೆದ ಎರಡು ದಶಕಗಳಲ್ಲಿ ಭಾರತದ ರಾಜಕಾರಣ, ಸಾಮಾಜಿಕ ಪಲ್ಲಟಗಳು, ಸಾಂಸ್ಕೃತಿಕ ತಲ್ಲಣಗಳು ಮತ್ತು ಸಾರ್ವಜನಿಕ ಜೀವನದ ಏಳುಬೀಳುಗಳನ್ನು ದಾಖಲಿಸುತ್ತಲೇ ಬಂದಿರುವ ವಿದ್ಯುನ್ಮಾನ ದೃಶ್ಯ ಮಾಧ್ಯಮಗಳ ಸ್ವರೂಪ ಮತ್ತು ಕಾರ್ಯವೈಖರಿ ಇಂದಿನ ಸನ್ನಿವೇಶದಲ್ಲಿ ಹೆಚ್ಚು ಚರ್ಚೆಗೊಳಗಾಗಬೇಕಿದೆ.

ADVERTISEMENT

ಇದೇ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ, ವಿಶೇಷವಾಗಿ ಕನ್ನಡ ಸುದ್ದಿಮನೆಗಳ, ನೈತಿಕತೆ ಮತ್ತು ವೃತ್ತಿಪರತೆಯೇ ಪ್ರಶ್ನಾರ್ಹವಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯಲು ಒತ್ತಾಯಿಸುವ ಮೂಲಕ ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದು ರಾಜ್ಯಾದ್ಯಂತ ಜನರ ಆಕ್ರೋಶಕ್ಕೆ ತುತ್ತಾಗಿದ್ದು ಸಹಜ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ನ್ಯಾ ಮಲ್ಲಿಕಾರ್ಜುನ ಗೌಡ್ ಅವರನ್ನು ವಜಾ ಮಾಡಲು ಒತ್ತಾಯಿಸಿ ರಾಜ್ಯದ ಎಲ್ಲ ದಲಿತ ಸಂಘಟನೆಗಳು, ಪ್ರಗತಿಪರ ಗುಂಪುಗಳು ಮತ್ತು ವಿಚಾರವಂತರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಬಹುಶಃ ಇತ್ತೀಚೆಗೆ ತಾನೇ ಅಂತ್ಯಗೊಂಡ ದೆಹಲಿಯ ರೈತಮುಷ್ಕರವನ್ನು ಹೊರತುಪಡಿಸಿದರೆ, ಫೆಬ್ರವರಿ 19ರ ಪ್ರತಿಭಟನಾ ಮೆರವಣಿಗೆ ಒಂದು ಚಾರಿತ್ರಿಕ ಗಳಿಗೆಯಾಗಿ ಕಾಣುತ್ತದೆ. ಸಾಗರೋಪಾದಿಯಲ್ಲಿ ನೆರೆದ ಜನರ ಆಕ್ರೋಶದ ದನಿಗಳು ಆಳುವವರನ್ನು ತಲುಪಿದ್ದರೂ, ರಸ್ತೆಗಳನ್ನು ನೀಲಿಮಯವಾಗಿಸಿದ ಈ ಜನಸ್ತೋಮ ಕನ್ನಡದ ಸುದ್ದಿಮನೆಗಳನ್ನು ತಲುಪದೆ ಹೋದದ್ದು, ಕನ್ನಡ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಗೆ ಕಾಣದೆ ಹೋದದ್ದು ಸಹಜವಾಗಿಯೇ ಜನಾಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಸುದ್ದಿಮನೆಗಳು ಏಕೆ ಶೋಷಿತ ಜನರ ದನಿಗೆ ಕಿವುಡಾಗಿವೆ ? ಏಕೆ ಶೋಷಿತ ಆಕ್ರೋಶಕ್ಕೆ, ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಕುರುಡಾಗಿವೆ ? ಹಿಜಾಬ್ ತೊಟ್ಟ ಪುಟ್ಟ ಹುಡುಗಿಯನ್ನು ಅಟ್ಟಿಸಿಕೊಂಡು ಹೋಗುವ ಕ್ಯಾಮರಾಗಳಿಗೆ, ಬೈಟ್‍ಗಳಿಗಾಗಿ ಪೀಡಿಸುವ, ರೋಚಕ ಸುದ್ದಿಗಾಗಿ ಹಪಹಪಿಸುವ ಸುದ್ದಿಮನೆಗಳ ಕ್ಯಾಮರಾವಾಹಕರಿಗೆ ಈ ಸಾವಿರಾರು ನೀಲವಸ್ತ್ರದ ಜನರು ಏಕೆ ಗೋಚರಿಸುವುದಿಲ್ಲ. ದೇಶಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಿರುವ ಲಕ್ಷಾಂತರ ಕಾರ್ಮಿಕರು, ಶ್ರಮಜೀವಿಗಳು, ಮಹಿಳೆಯರು, ಆದಿವಾಸಿಗಳು ಏಕೆ ಕಾಣುವುದಿಲ್ಲ ?

ಬಂಡವಾಳಶಾಹಿ ಅರ್ಥವ್ಯವಸ್ಥೆ ಮತ್ತು ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಭಾರತೀಯ ಸಮಾಜದಲ್ಲಿ ಇಂದಿಗೂ ಬೇರೂರಿರುವ ಊಳಿಗಮಾನ್ಯ ಧೋರಣೆಯ ಮೇಲರಿಮೆ ಈ ಮೂರೂ ವಿದ್ಯಮಾನಗಳನ್ನು ಭಾರತದ ಮಾಧ್ಯಮಗಳ ಕಾರ್ಯವೈಖರಿಯಲ್ಲಿ ಗುರುತಿಸಬಹುದು. ವಿದ್ಯುನ್ಮಾನ ಮಾಧ್ಯಮಗಳ ಅಸೂಕ್ಷ್ಮತೆಗೆ ಮಾರುಕಟ್ಟೆ ಪ್ರೇರಿತ ಟಿಆರ್‍ಪಿ ಗಣನೆಯೊಂದೇ ಕಾರಣವಲ್ಲ. ಈ ಮಾಧ್ಯಮಗಳನ್ನು ನಿಯಂತ್ರಿಸುವ ಬಂಡವಳಿಗ ಸಮೂಹ, ನಿರ್ವಹಿಸುವ ಮೇಲ್ಜಾತಿಯ ಮನಸುಗಳು ಮತ್ತು ಇವೆರಡನ್ನೂ ಪ್ರಭಾವಿಸುವ ಮಾರುಕಟ್ಟೆಯ ಅನಿವಾರ್ಯತೆಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಜನಸ್ಪಂದನೆಯ ಪ್ರಮಾಣವನ್ನೂ ನಿರ್ಧರಿಸುತ್ತವೆ. ಕನ್ನಡದ ಸುದ್ದಿಮನೆಗಳು ಮತ್ತು ವಾರ್ತಾಭಾರತಿಯನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರಿಕೆಗಳೂ ಬೆಂಗಳೂರಿನ ಪ್ರತಿಭಟನೆಯ ಸುದ್ದಿಗೆ ಪ್ರಾಶಸ್ತ್ಯ  ನೀಡದಿರುವುದನ್ನು ಈ ನೆಲೆಯಲ್ಲೇ ವ್ಯಾಖ್ಯಾನಿಸಬೇಕಿದೆ.

ಮಾಧ್ಯಮಗಳು ದಲಿತ ಸಮುದಾಯಗಳ ದನಿಗೆ ದನಿಯಾಗುತ್ತಿಲ್ಲ ಎಂಬ ಹಲುಬುವಿಕೆಯ ನಡುವೆಯೇ ಈ ಮಾಧ್ಯಮಗಳ ಮೂಲ ಸ್ವರೂಪವನ್ನೂ ಪರಾಮರ್ಶಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಸಂಸ್ಥೆಯಾಗಿ, ಸಾಮಾನ್ಯ ಪ್ರಜೆಗಳ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದಷ್ಟೇ ಅಲ್ಲದೆ, ಆಡಳಿತ ವ್ಯವಸ್ಥೆಯೊಡನೆ, ಆಡಳಿತಾರೂಢ ಅಧಿಕಾರ ಕೇಂದ್ರಗಳೊಡನೆ ಮತ್ತು ಸ್ಥಾಪಿತ ಸಾಮಾಜಿಕ ವ್ಯವಸ್ಥೆಯೊಡನೆ ಗುರುತಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಒಂದು ವರ್ಷದ ಕಾಲ ದೆಹಲಿ ಗಡಿಗಳಲ್ಲಿ ನಡೆದ  ಚಾರಿತ್ರಿಕ ರೈತ ಮುಷ್ಕರದ ಸಂದರ್ಭದಲ್ಲೂ ವಿದ್ಯುನ್ಮಾನ ಮಾಧ್ಯಮಗಳು ಇದೇ ನಿಷ್ಕ್ರಿಯತೆ ಮತ್ತು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದವು. 2019-20ರಲ್ಲಿ ಸಿಎಎ-ಎನ್‍ಆರ್‍ಸಿ ವಿರುದ್ಧ ನಡೆದ ಜನಾಂದೋಲನಗಳ ಸಂದರ್ಭದಲ್ಲೂ ಬಹುಪಾಲು ಸುದ್ದಿಮನೆಗಳು ಆಡಳಿತ ವ್ಯವಸ್ಥೆಯ ವಕ್ತಾರರಂತೆ ವರ್ತಿಸಿದ್ದವು.

ಇಲ್ಲಿ ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆ ಮತ್ತು ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಜ್ಜಾಗಿರುವ ಔದ್ಯಮಿಕ ವಲಯದ ಹಿತಾಸಕ್ತಿಗಳು ಮುನ್ನೆಲೆಗೆ ಬರುತ್ತವೆ. ದೇಶದ ಪ್ರಜೆಗಳ ದನಿಗೆ ದನಿಯಾಗಬೇಕಾದ ಮಾಧ್ಯಮ ವಲಯ ಪ್ರಭುತ್ವದ ದನಿಗೆ ದನಿಗೂಡಿಸಿದರೆ ಏನಾಗಬಹುದು ಎಂಬ ಪ್ರಶ್ನೆಗೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು, ವಿಶೇಷವಾಗಿ ಕನ್ನಡದ ಸುದ್ದಿಮನೆಗಳು ನಿದರ್ಶನವಾಗಿ ಕಾಣುತ್ತವೆ. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಇಂದು ತಮ್ಮ ವೃತ್ತಿಧರ್ಮದ ಚೌಕಟ್ಟನ್ನು ದಾಟಿ, ಮಾರುಕಟ್ಟೆಯ ಒಂದು ಭಾಗವಾಗಿವೆ. ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲೇ ಇರುವ ಬಹುಪಾಲು ಸುದ್ದಿಮನೆಗಳು ಮತ್ತು ವಾಹಿನಿಗಳು ಒಂದೆಡೆ ಮಾರುಕಟ್ಟೆ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ಮತ್ತು ಅದರ ಹಿಂದುತ್ವ ರಾಜಕಾರಣದೊಂದಿಗೆ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ತಿತ್ವವನ್ನೂ ಕಾಪಾಡಿಕೊಳ್ಳಲು ಶ್ರಮಿಸುತ್ತವೆ.

ಬಹುಪಾಲು ಮಾಧ್ಯಮ ಸಮೂಹಗಳ ಒಡೆತನವನ್ನು ಹಿಂದುತ್ವ ರಾಜಕಾರಣದ ಕಾಲಾಳು ಉದ್ಯಮಿಗಳೇ ಹೊಂದಿರುವುದರಿಂದಲೇ ಇಂದು ಕನ್ನಡದ ಮತ್ತು ಹಿಂದಿಯ ಸುದ್ದಿಮನೆಗಳು ಭಟ್ಟಂಗಿತನದ ಪರಾಕಾಷ್ಠೆ ತಲುಪಿವೆ. ಕನ್ನಡದ ಮಟ್ಟಿಗೆ ಹೇಳುವುದಾದರೆ ಕೋವಿದ್ ಸಾಂಕ್ರಾಮಿಕದ ಸಂದರ್ಭದಲ್ಲೇ ಕನ್ನಡದ ಸುದ್ದಿಮನೆಗಳ ಭ್ರಷ್ಟಾತಿಭ್ರಷ್ಟ ಅವತಾರವನ್ನು ಕಂಡಿದ್ದಾಗಿದೆ. ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಅಥವಾ ಜನಪರ ಧ್ವನಿಯನ್ನು ಪ್ರತಿನಿಧಿಸುವ ಯಾವುದೇ ಒಂದು ಪ್ರತಿಭಟನೆ, ಪ್ರತಿರೋಧ, ಆಂದೋಲನ ಅಥವಾ ಮುಷ್ಕರ ಈ ವಾಹಿನಿಗಳ ಪಾಲಿಗೆ ನಗಣ್ಯ ಎನಿಸುತ್ತದೆ. ಪ್ರಸ್ತುತ ಹಿಜಾಬ್ ವಿವಾದದಲ್ಲೂ ಇದೇ ಮಾದರಿಯನ್ನು ಗಮನಿಸುತ್ತಿದ್ದೇವೆ. ತಮ್ಮ ಮಾರುಕಟ್ಟೆ ಟಿಆರ್‍ಪಿ ಹೆಚ್ಚಿಸಿಕೊಳ್ಳುವುದರೊಂದಿಗೇ, ಅತಿಯಾದ ಸ್ವಾಮಿನಿಷ್ಠೆಯನ್ನು ಪ್ರದರ್ಶಿಸುವ ಮೂಲಕ ಕನ್ನಡದ ಸುದ್ದಿಮನೆಗಳು ಜನಸಮೂಹಗಳ ಸಾರ್ವತ್ರಿಕ ಸಮಸ್ಯೆಗಳಿಗೆ ವಿಮುಖವಾಗುತ್ತಿವೆ.

ಒಂದು ಔದ್ಯಮಿಕ ಸಂಸ್ಥೆಯಾಗಿ ಯಾವುದೇ ಮಾಧ್ಯಮ ಸಮೂಹ/ವಾಹಿನಿ/ಸುದ್ದಿಮನೆ ಮಾರುಕಟ್ಟೆಯ ಅನಿವಾರ್ಯತೆಗಳಿಗೆ ತಕ್ಕಂತೆ ವರ್ತಿಸುವುದು ಸಹಜವೇ ಆದರೂ, ಈ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಿಕೋದ್ಯೋಗಿಗಳು, ಪತ್ರಕರ್ತರು, ಸುದ್ದಿ ಸಂಪಾದಕರು ಮತ್ತು ವರದಿಗಾರರು ತಮ್ಮ ವೃತ್ತಿಧರ್ಮವನ್ನು ಪಾಲಿಸಬೇಕಲ್ಲವೇ ? ಸಂಘಪರಿವಾರದ ವಕ್ತಾರರಂತೆ ಮಾತನಾಡುವ ಕನ್ನಡದ ಸುದ್ದಿಮನೆಗಳ ಸಂಪಾದಕರು, ನಿರೂಪಕರು ಮತ್ತು ವರದಿಗಾರರು ಈ ವೃತ್ತಿಧರ್ಮವನ್ನು ಮರೆತಿರುವುದರಿಂದಲೇ ಕನ್ನಡದ ಮಾಧ್ಯಮ ಲೋಕ ನೈತಿಕವಾಗಿ ಅಧೋಗತಿಗಿಳಿದಿದೆ. ಈ ಅಧಃಪತನದ ಮೂಲ ಕಾರಣ ಇರುವುದು ಮಾಧ್ಯಮಗಳನ್ನು ಪ್ರತಿನಿಧಿಸುವ ವ್ಯಕ್ತಿಗಳ ಜಾತಿ ಶ್ರೇಷ್ಠತೆಯ ಮೇಲರಿಮೆ ಮತ್ತು ಅಹಮಿಕೆಯಲ್ಲಿ. ತಳಸಮುದಾಯಗಳೊಡನೆ, ಶೋಷಿತ, ತುಳಿತಕ್ಕೊಳಗಾದ, ದಮನಿತ ಜನತೆಯೊಡನೆ ಗುರುತಿಸಿಕೊಳ್ಳಲಾಗದಂತಹ ಒಂದು ತಾತ್ವಿಕ ನೆಲೆಗಳಲ್ಲಿ ಈ ಸಂಪಾದಕರ ವರ್ಗ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಂಡಿರುತ್ತದೆ.

ಪತ್ರಿಕಾವಲಯದಲ್ಲಿ ಅಥವಾ ವಿದ್ಯುನ್ಮಾನ ಮಾಧ್ಯಮ ವಲಯದಲ್ಲಿರುವ ಪತ್ರಿಕೋದ್ಯೋಗಿಗಳಿಗೆ ಸಮಷ್ಟಿ ಪ್ರಜ್ಞೆ ಸದಾ ಜಾಗೃತಾವಸ್ಥೆಯಲ್ಲಿರಬೇಕಾದ್ದು ಅತ್ಯವಶ್ಯ. ತಾವು ಪ್ರತಿನಿಧಿಸುವ ಮಾಧ್ಯಮ ಸಮೂಹದ ಒಡೆತನಕ್ಕೂ ತಾವು ನಿರ್ವಹಿಸುವ ಸಮಾಜಮುಖಿ ಚಟುವಟಿಕೆಗೂ ನಡುವೆ ಒಂದು ಗೋಡೆ ಅತ್ಯವಶ್ಯವಾಗಿ ಇರಬೇಕು. ಸುದ್ದಿ ವಾಹಕರಾಗಿ, ಸುದ್ದಿ ಸಂಪಾದಕರಾಗಿ ಮತ್ತು ಟಿವಿ ವಾಹಿನಿಯ ನಿರೂಪಕರಾಗಿ ಲಕ್ಷಾಂತರ ಜನರನ್ನು ಕ್ಷಣಮಾತ್ರದಲ್ಲಿ ತಲುಪುವ ಜವಾಬ್ದಾರಿಯನ್ನು ಹೊತ್ತಿರುವ ವ್ಯಕ್ತಿಗಳಲ್ಲಿ ಸಮಷ್ಟಿ ಪ್ರಜ್ಞೆಯೊಡನೆ ಸಮಾಜದ ಆಂತರಿಕ ತುಮುಲಗಳನ್ನು ಗ್ರಹಿಸುವ ತೀಕ್ಷ್ಣತೆಯೂ ಇರಬೇಕಾಗುತ್ತದೆ. ಒಬ್ಬ ಜನಪ್ರತಿನಿಧಿಯಲ್ಲಿ ಇರಬೇಕಾದ ಸೂಕ್ಷ್ಮ ಸಂವೇದನೆಯೇ ಸುದ್ದಿವಾಹಕರಲ್ಲೂ ಇರಬೇಕಾಗುತ್ತದೆ.(ಇಲ್ಲ ಎನ್ನುವುದು ವಾಸ್ತವ.)ಏಕೆಂದರೆ ತಮ್ಮ ಜೀವನೋಪಾಯಕ್ಕಾಗಿ ಮಾಧ್ಯಮದ ಒಡೆಯನನ್ನು ಆಶ್ರಯಿಸಬೇಕಾದರೂ, ಈ ಸುದ್ದಿವಾಹಕರು ಬೌದ್ಧಿಕವಾಗಿ ಜನಸಾಮಾನ್ಯರನ್ನೇ ಪ್ರತಿನಿಧಿಸುತ್ತಾರೆ. ಜನಸಮೂಹಗಳನ್ನು ಕಾಡುವ  ಜ್ವಲಂತ ಸಮಸ್ಯೆಗಳು, ಸಂದಿಗ್ಧತೆಗಳು ಮತ್ತು ಜಟಿಲ ಬಿಕ್ಕಟ್ಟುಗಳು ಪ್ರತಿಯೊಬ್ಬ ಸುದ್ದಿವಾಹಕರಲ್ಲೂ ಪ್ರಕ್ಷುಬ್ಧತೆಯನ್ನು ಸೃಷ್ಟಿಸದೆ ಹೋದರೆ, ಅಂಥವರನ್ನು ಸ್ಥಾಪಿತ ವ್ಯವಸ್ಥೆಯ ಏಜೆಂಟರೆಂದಷ್ಟೇ ಪರಿಗಣಿಸಲು ಸಾಧ್ಯ.

ಇಂದು ಕನ್ನಡದ ಸುದ್ದಿಮನೆಗಳಲ್ಲಿ ಇಂತಹ ಏಜೆಂಟರೇ ಪ್ರಧಾನವಾಗಿ ಕಂಡುಬರುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಸಿಎಎ-ಎನ್‍ಆರ್‍ಸಿವರೆಗೆ, ಜೆಎನ್‍ಯು ವಿವಾದದಿಂದ ಮೈಸೂರಿನ ರಂಗಾಯಣದವರೆಗೆ, ಕೋವಿದ್ ಸಾಂಕ್ರಾಮಿಕದಿಂದ ಹಿಜಾಬ್ ವಿವಾದದವರೆಗೆ, ಕನ್ನಡದ ಸುದ್ದಿಮನೆಗಳ ಸುದ್ದಿವಾಹಕರು ತಮ್ಮ ವೃತ್ತಿಧರ್ಮಕ್ಕಿಂತಲೂ ಸ್ವಾಮಿನಿಷ್ಠೆಗೇ ಹೆಚ್ಚು ಪ್ರಾಮುಖ್ಯತೆ ನೀಡಿರುವುದನ್ನು ಗಮನಿಸಬೇಕು. ಇದಕ್ಕೆ ಕಾರಣ ಈ ಸುದ್ದಿವಾಹಕರು ತಮ್ಮ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರುವ ಪ್ರಯತ್ನವನ್ನೇ ಮಾಡದಿರುವುದು. ಒಂದೆಡೆ ಧನದಾಹಿ ಬಂಡವಾಳ ವ್ಯವಸ್ಥೆಯ ಆರಾಧಕರಾಗಿ ತಮ್ಮ ಜೀವನೋಪಾಯ ಕಂಡುಕೊಳ್ಳುತ್ತಲೇ ಮತ್ತೊಂದೆಡೆ ತಮ್ಮ ವ್ಯಕ್ತಿಗತ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರಲಾರದೆ, ಮನುಜ ಸೂಕ್ಷ್ಮತೆ ಮತ್ತು ಸಂವೇದನೆಯನ್ನೂ ಕಳೆದುಕೊಂಡು, ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ನೆಲೆಗಳಿಗೆ ಮೇವುಣಿಸುತ್ತಿರುವುದು ಕನ್ನಡ ಸುದ್ದಿಮನೆಗಳ ಸುದ್ದಿವಾಹಕರ ಲಕ್ಷಣ.

ಹಾಗಾಗಿಯೇ ಕನ್ನಡದ ಸುದ್ದಿಮನೆಗಳಿಗೆ ಕೊಪ್ಪಳದ ದೇವಸ್ಥಾನದ ಘಟನೆಯಂತಹ ಅಸ್ಪೃಶ್ಯತೆಯ ದೌರ್ಜನ್ಯಗಳು, ಹಾಥ್ರಸ್‍ನಂತಹ ಶೋಷಿತ ಮಹಿಳೆಯರ ಮೇಲಿನ ಅತ್ಯಾಚಾರಗಳು, ಹಿಜಾಬ್ ವಿವಾದದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಚ್ಯುತಿ, ದಿನನಿತ್ಯ ನಡೆಯುತ್ತಿರುವ ಜಾತಿ ದೌರ್ಜನ್ಯದ ಪ್ರಕರಣಗಳು ಪ್ರಮುಖ ಸುದ್ದಿಯಾಗಿ ಕಾಣುವುದಿಲ್ಲ. ಈ ಸುದ್ದಿಮನೆಗಳ ಕ್ಯಾಮರಾ ಕಣ್ಣುಗಳಿಗೆ ಶೋಷಣೆಯ ನೆಲೆಗಳು ಗೋಚರಿಸುವುದಿಲ್ಲ ಹಾಗೆಯೇ ಶೋಷಣೆಯ ವಿರುದ್ಧ ಸಮಾಜದಲ್ಲಿ ಗಟ್ಟಿಯಾಗಿಯೇ ಕೇಳಿಬರುವ ಪ್ರತಿರೋಧದ ಧ್ವನಿಗಳೂ ಕೇಳಿಸುವುದಿಲ್ಲ. ಹಾಗಾಗಿಯೇ ದೆಹಲಿಯ ರೈತಮುಷ್ಕರದಲ್ಲಿ ಆಳುವ ವರ್ಗಗಳಿಗೆ ಕಂಡ ಕಲ್ಪಿತ ಭಯೋತ್ಪಾದಕರು, ಖಲಿಸ್ತಾನಿಗಳು, ಉಗ್ರಗಾಮಿಗಳೇ ಈ ಸುದ್ದಿಮನೆಯ ಸಂಪಾದಕರಿಗೂ ಹಾಗೆಯೇ ಕಾಣುತ್ತಾರೆ. ಸುದ್ದಿಮನೆಗಳ ಸಂಪಾದಕರಿಗೆ ತಮ್ಮದೇ ಆದ ಕಣ್ಣೋಟ/ಮುನ್ನೋಟ ಇದ್ದಿದ್ದರೆ ದೆಹಲಿಯ ಗಡಿಗಳಲ್ಲಿ ರೈತರೇ ಕಾಣುತ್ತಿದ್ದರು. ಆದರೆ ಈ ಮಾಧ್ಯಮ ವಕ್ತಾರರರ ದೃಷ್ಟಿಗೆ ಮಾರುಕಟ್ಟೆಯ ಪರದೆ, ಜಾತಿ ಶ್ರೇಷ್ಠತೆಯ ಮಸುಕು ಕವಿದಿರುತ್ತದೆ.

ಬಂಡವಾಳಶಾಹಿ ಅರ್ಥವ್ಯವಸ್ಥೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಸ್ಥಾಪಿತ ವ್ಯವಸ್ಥೆಯೊಳಗಿನ ಇಂತಹ ಒಳಬಿರುಕುಗಳನ್ನೇ ಹೆಚ್ಚಾಗಿ ಆಶ್ರಯಿಸುತ್ತದೆ. ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ವ್ಯವಸ್ಥೆ, ಅದರೊಳಗಿನ ಶ್ರೇಷ್ಠತೆಯ ವ್ಯಸನ ಮತ್ತು ಅದು ಉಂಟುಮಾಡುವ ಬಿರುಕುಗಳು, ಈ ಜಾತಿ ವ್ಯವಸ್ಥೆಯನ್ನು ಪೋಷಿಸುವ ವೈದಿಕಶಾಹಿ ಸಾಂಸ್ಕೃತಿಕ ರಾಜಕಾರಣ ಇವೆಲ್ಲವೂ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಸಾಧನಗಳಾಗಿ ಬಳಕೆಯಾಗುತ್ತವೆ. ಹಾಗಾಗಿಯೇ ಪ್ರಜಾವಾಣಿಯಂತಹ ಪತ್ರಿಕೆಯೂ ಸಹ ತನ್ನ ಅಸೂಕ್ಷ್ಮತೆಯನ್ನು ಆಗಿಂದಾಗ್ಗೆ ಪ್ರದರ್ಶಿಸುತ್ತಲೇ ಇರುತ್ತದೆ. ಬಂಡವಾಳಶಾಹಿಯು ತನ್ನ ಉಳಿವಿಗಾಗಿ ಅವಲಂಬಿಸುವ ಪ್ರತಿಯೊಂದು ಸಾಮಾಜಿಕ ನೆಲೆಗಳನ್ನೂ ತನ್ನ ಬಂಡವಾಳದ ಮೂಲಕವೇ ಬಲಪಡಿಸುತ್ತಿರುತ್ತದೆ. ಇದರಲ್ಲಿ ಜಾತಿ ವ್ಯವಸ್ಥೆ ಮತ್ತು ಅದು ಪ್ರತಿನಿಧಿಸುವ ವೈದಿಕಶಾಹಿಯ ಶೋಷಕ ವ್ಯವಸ್ಥೆಯೂ ಒಂದು.

ತನಗೆ ಅತ್ಯವಶ್ಯವಾದ ಸಂವಹನ ಮಾಧ್ಯಮಗಳನ್ನು ಸಂರಕ್ಷಿಸಲು ಬಂಡವಾಳಶಾಹಿ ಮಾರುಕಟ್ಟೆ ಸಮಾಜದ ಬೌದ್ಧಿಕ ನೆಲೆಗಳನ್ನೂ ತನ್ನ ಬಾಹುಗಳಲ್ಲಿ ಬಂಧಿಸಲಾರಂಭಿಸುತ್ತದೆ. ಸಾಮಾನ್ಯ ಅಧ್ಯಯನ, ಸಂಶೋಧನೆ ಮತ್ತು ಪರಿಶೋಧನೆಯ ನೆಲೆಗಳನ್ನೂ ಸಹ ವಾಣಿಜ್ಯೀಕರಣಗೊಳಿಸುವ ಮೂಲಕ, ಸಂವಹನದ ಸೇತುವೆಗಳಲ್ಲಿ ತನ್ನದೇ ಆದ ನಿಯಂತ್ರಕ ಶಕ್ತಿಗಳನ್ನು ರೂಪಿಸುತ್ತಾ ಹೋಗುತ್ತದೆ. ಮಾಧ್ಯಮಗಳು ಏಕೆ ಹೀಗಾಗಿವೆ ? ಶೈಕ್ಷಣಿಕ ವಲಯ, ಬೌದ್ಧಿಕ ವಲಯ, ಅಕಾಡೆಮಿಕ್ ವಲಯ ಏಕೆ ನಿಷ್ಕ್ರಿಯವಾಗಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿ ಕಂಡುಕೊಳ್ಳಬೇಕಿದೆ. ಸಂಸ್ಕೃತಿ, ಕಲೆ, ಜ್ಞಾನ ಮತ್ತು ಬೌದ್ಧಿಕ ಸಂಪತ್ತನ್ನು ಮಾರುಕಟ್ಟೆಯ ಸರಕುಗಳಂತೆಯೇ ಪರಿಗಣಿಸುವ ಮಾರುಕಟ್ಟೆ ವ್ಯವಸ್ಥೆ ಈ ವಲಯಗಳ ಸಂವಹನ ಸೇತುವೆಗಳನ್ನೂ ಹರಾಜು ಮಾರುಕಟ್ಟೆಯ ಜಗುಲಿಯಂತೆಯೇ ಪರಿವರ್ತಿಸಿಬಿಡುತ್ತದೆ. ಹಾಗಾಗಿಯೇ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಳು ಬಿಕರಿಯಾಗುವಂತೆಯೇ ಸಂವಹನ ವಾಹಿನಿಗಳ ಸಂಪಾದಕ, ನಿರೂಪಕ, ಸುದ್ದಿವಾಹಕ ಹುದ್ದೆಗಳೂ ಬಿಕರಿಯಾಗತೊಡಗುತ್ತವೆ.

ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ಶ್ರೇಷ್ಠತೆಯ ನೆಲೆಗಳು ಮಾರುಕಟ್ಟೆ ಬಂಡವಾಳದೊಡನೆ ಸುಲಭವಾಗಿ ರಾಜಿಯಾಗುವುದರಿಂದಲೇ ಬಹುತೇಕ ಸಂವಹನದ ನೆಲೆಗಳು ತಮ್ಮ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡು ದಿನದಿಂದ ದಿನಕ್ಕೆ ಬೆತ್ತಲಾಗುತ್ತಿವೆ. ಆಳುವ ವರ್ಗಗಳ ಸುಳ್ಳುಗಳನ್ನು ವೈಭವೀಕರಿಸುವಷ್ಟೇ ರೋಚಕವಾಗಿ, ವಿನಾಶಕಾರಿ ಯುದ್ಧವನ್ನೂ ವೈಭವೀಕರಿಸುವ, ಕ್ರೂರ ಅತ್ಯಾಚಾರವನ್ನೂ ರಂಜನೀಯವಾಗಿಸುವ ಒಂದು ವಿಕೃತ ಧೋರಣೆಯನ್ನು ಭಾರತದ ಸುದ್ದಿವಾಹಿನಿಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ಈ ರಾಜೀ ಸೂತ್ರವೇ ಆಗಿರುತ್ತದೆ. ಹಾಗಾಗಿಯೇ ಆಳುವ ವರ್ಗಗಳ, ಪ್ರಭುತ್ವದ ಮತ್ತು ಸ್ಥಾಪಿತ ಹಿತಾಸಕ್ತಿಗಳ ಪರಿಭಾಷೆಯೇ ಮಾಧ್ಯಮದ ಪರಿಭಾಷೆಯೂ ಆಗುತ್ತದೆ. ಜೆಎನ್‍ಯು ಸಂಘರ್ಷದಲ್ಲಿ, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ, ಕೋವಿದ್ ನಿರ್ವಹಣೆಯಲ್ಲಿ ಇದನ್ನು ನೇರವಾಗಿಯೇ ಕಂಡಿದ್ದೇವೆ. ಹಿಜಾಬ್ ವಿವಾದದಲ್ಲೂ ಕಾಣುತ್ತಿದ್ದೇವೆ.

ಇಲ್ಲಿ ಆಧುನಿಕ ವಿದ್ಯುನ್ಮಾನ ಲೋಕದ ಸಾಮಾಜಿಕ ಮಾಧ್ಯಮಗಳ ಪಾತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಬಂಡವಾಳಶಾಹಿ ಮಾರುಕಟ್ಟೆಯ ಹಂಗಿಲ್ಲದೆ ಸಮಾಜಮುಖಿಯಾಗಿ, ಜನಸ್ಪಂದನೆಯೊಂದಿಗೆ, ಜನಸಮೂಹಗಳಿಗೆ ದನಿಗೆ ದನಿಯಾಗುವ ನೂತನ ಸಂವಹನ ಸೇತುವೆಗಳನ್ನು ನಾವಿಂದು ನಿರ್ಮಿಸಬೇಕಿದೆ. ಇಲ್ಲಿಯೂ ಸಹ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಾಮಾಜಿಕ ಮಾಧ್ಯಮಗಳು ಮತ್ತಷ್ಟು ಒಳಬಿರುಕುಗಳನ್ನು ಸೃಷ್ಟಿಸುತ್ತಲೇ ಹೋಗುವ ಸಾಧ್ಯತೆಗಳಿರುತ್ತವೆ.  ಇವೆಲ್ಲವನ್ನೂ ಮೀರಿ ಜನಪರ ವಾಹಿನಿಗಳು ವೈಚಾರಿಕತೆಯ ನೆಲೆಯಲ್ಲಿ, ವೈಜ್ಞಾನಿಕ ಮನೋಭಾವದೊಂದಿಗೆ, ಸಾಂವಿಧಾನಿಕ ಬದ್ಧತೆಯೊಂದಿಗೆ, ಪ್ರಜಾಸತ್ತಾತ್ಮಕ ಪ್ರಜ್ಞಾವಂತಿಕೆಯೊಂದಿಗೆ, ಜನಸಮುದಾಯಗಳ ನೋವಿನ ದನಿಗೆ ದನಿಯಾಗಿ ರೂಪುಗೊಳ್ಳಬೇಕಿದೆ. ಭಾರತದ ಸಂವಿಧಾನದ ಆಶಯದಂತೆ ದೇಶವನ್ನು ಒಂದು ಸರ್ವಜನಾಂಗದ ಶಾಂತಿಯ ತೋಟದಂತೆ ರೂಪಿಸಬೇಕಾದರೆ, ಈ ಸಂವಹನ ಸೇತುವೆಗಳು ಬಲಿಷ್ಠವಾಗುವುದು ಅತ್ಯವಶ್ಯ.

Tags: ಆದಿವಾಸಿಗಳುಆಧುನಿಕ ತಂತ್ರಜ್ಞಾನಉದ್ಯಮಕಾರ್ಪೋರೇಟ್ ಆಧಿಪತ್ಯಕಾರ್ಮಿಕರುದೃಶ್ಯ ಮಾಧ್ಯಮಗಳಬೃಹತ್ ಪ್ರತಿಭಟನಾ ಮೆರವಣಿಗೆಮಹಿಳೆಯರುಮಾಧ್ಯಮಗಳುವಿಶೇಷವಾಗಿ ಕನ್ನಡ ಸುದ್ದಿಮನೆಗಳಶ್ರಮಜೀವಿಗಳು
Previous Post

ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

Next Post

ಪೋಷಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಗಮನ : ಮಕ್ಕಳಿಗೆ ಶಿಕ್ಷಣಕ್ಕಿಂತ ಲವ್ ಮೇಲೆ ಒಲವು!

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಭಾರತದಲ್ಲಿ ಸಮಕಾಲೀನ ಪ್ರಭುತ್ವ..

ಭಾರತದಲ್ಲಿ ಸಮಕಾಲೀನ ಪ್ರಭುತ್ವ..

March 21, 2026
ಡಾ ಬಿ.ಆರ್. ಅಂಬೇಡ್ಕರ್‌ ದೃಷ್ಟಿಯಲ್ಲಿ ಪ್ರಭುತ್ವ ಮತ್ತು ಪ್ರಜಾತಂತ್ರ

ಡಾ ಬಿ.ಆರ್. ಅಂಬೇಡ್ಕರ್‌ ದೃಷ್ಟಿಯಲ್ಲಿ ಪ್ರಭುತ್ವ ಮತ್ತು ಪ್ರಜಾತಂತ್ರ

March 18, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
ಕನ್ಯಾಕುಮಾರಿ- ಕಾಶ್ಮೀರ ರೈತ ಜಾಗೃತಿ ಯಾತ್ರೆ: MSPಗೆ ಸಿಗಲಿರುವುದೇ ಕೇಂದ್ರದ ಅಸ್ತು?

ಕನ್ಯಾಕುಮಾರಿ- ಕಾಶ್ಮೀರ ರೈತ ಜಾಗೃತಿ ಯಾತ್ರೆ: MSPಗೆ ಸಿಗಲಿರುವುದೇ ಕೇಂದ್ರದ ಅಸ್ತು?

February 3, 2026
Next Post
ಪೋಷಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಗಮನ : ಮಕ್ಕಳಿಗೆ ಶಿಕ್ಷಣಕ್ಕಿಂತ ಲವ್ ಮೇಲೆ ಒಲವು!

ಪೋಷಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಗಮನ : ಮಕ್ಕಳಿಗೆ ಶಿಕ್ಷಣಕ್ಕಿಂತ ಲವ್ ಮೇಲೆ ಒಲವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada