ಕರೋನಾ ನಿಯಂತ್ರಣ ವಿಚಾರ ಸಂಬಂಧ ಕೇಂದ್ರ ಹಾಗು ರಾಜ್ಯ ಸರ್ಕಾರದ ನಡೆಯನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಸಾಲು-ಸಾಲಾಗಿ ಟೀಕಿಸಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ಪಕ್ಷವೇ ನೇರಹೊಣೆ ಎಂದು ಆರೋಪಿಸಿದ್ದಾರೆ.
ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಿತ್ಯ 50,000 ಪಾಸಿಟಿವ್ ಕೇಸ್ಗಳು ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಾನು ನಮ್ಮ ಶಾಸಕರೊಂದಿಗೆ ಮಾತನಾಡಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.