ಕೇಂದ್ರ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಕೊಡಬೇಕು ಮತ್ತು ನಮ್ಮ ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಅಂಗೀಕರಿಸಬೇಕು ಎಂದು ಸದನದ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ತಮಿಳುನಾಡಿನ ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ಕಾನೂನು ಬಾಹಿರವಾಗಿದೆ. ಈ ನಿರ್ಣಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ನಾವು ಮೇಕೆದಾಟು ಯೋಜನೆ ಮಾಡುತ್ತಿರೋದು ಸಂವಿಧಾನಬದ್ಧವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ನ ಅಂತಿಮ ಆದೇಶ 16/02/2018 ರಲ್ಲಿ ಬಂದಿದೆ. ಸಹಜ ಪರಿಸ್ಥಿತಿಯ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಬಿಳಿಗೊಂಡ್ಲುವಿನಿಂದ ತಮಿಳುನಾಡಿಗೆ ಬಿಡಬೇಕು ಎಂದು ತೀರ್ಪು ಹೇಳಿದೆ. ಈ ಆದೇಶವನ್ನು ಎರಡೂ ರಾಜ್ಯಗಳು ಒಪ್ಪಿಕೊಂಡಿದ್ದೇವೆ.
ತನ್ನ ಪಾಲಿನ ನೀರನ್ನು ಪಡೆದುಕೊಳ್ಳುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ವರೆಗೆ ತಮಿಳುನಾಡಿಗೆ ಸುಮಾರು 582 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ.
ಇದು ನಮ್ಮ ಪಾಲಿನ ನೀರು, ನಾವು ಬಳಸಿಕೊಳ್ಳಬೇಕು.
ಬೆಂಗಳೂರು ನಗರದ ಸುಮಾರು 30% ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್ ವೆಲ್, ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗ್ತಿಲ್ಲ ಎಂದರೆ ಏನನ್ನಬೇಕು? ಎಂದು ಪ್ರಶ್ನಿಸಿದಾರೆ.
ಸುಪ್ರೀಂ ಕೋರ್ಟ್ ಬೆಂಗಳೂರು ನಗರಕ್ಕೆ 4.75 ಟಿಎಂಸಿ ಕಾವೇರಿ ನೀರನ್ನು ಹಂಚಿಕೆ ಮಾಡಿದೆ. ನಾವು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಬೇಕು ಎಂದು ರೂ. 9,000 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿದ್ದೇವೆ.
ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2022/02/1600x960_1205013-siddaramaiah-1024x614.jpg)
ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ.
ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದಂತೆ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ಕರೆದಿದ್ದರು, ಅಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ.
ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ. ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿಗಳು ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರ ಮುಂದೆ ವಸ್ತುಸ್ಥಿತಿಯನ್ನು ಹೇಳೋಣ.
ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ. ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ ಎಂದು ಹೇಳಿದ್ದಾರೆ.