ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎನ್ನುವ ವಿಚಾರವು ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಇದ್ದು ಇದೀಗ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ 139 ಶಾಸಕರೂ ನನ್ನ ಬಲ. ಸಿಎಂ ಸಿದ್ದರಾಮಯ್ಯ ಅವರು ಶೇ 100ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ. ನಾವು ಜನಕ್ಕೆ ಮಾತು ಕೊಟ್ಟಿದ್ದು, ಆ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ, ಮುಂದೆಯೂ ನಡೆಯುತ್ತೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ತಿಂಗಳಿಂದ ಡಿ.ಕೆ.ಶಿವಕುಮಾರ್ ಮಾತು, ಟ್ವೀಟ್ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ’ ಎಂದು ಆರ್.ಅಶೋಕ್ ಹೇಳಿದ್ದಾರೆ. ನಿಮ್ಮ ಟ್ವೀಟ್ ಅರ್ಥವೇನು ಎಂದು ಅಶೋಕ್ ಡಿಕೆಶಿಯವರನ್ನು ಪ್ರಶ್ನಿಸಿದರು. ಅದಕ್ಕೆ ಡಿ.ಕೆ.ಶಿವಕುಮಾರ್ ನೀವು ಟ್ವೀಟ್ ಅನ್ನು ಯಾವ ರೀತಿ ಅರ್ಥ ಮಾಡಿಕೊಳ್ಳುತ್ತೀರಿ ಎಂಬುದು ನಿಮಗೆ ಬಿಟ್ಟ ವಿಚಾರ ಎಂದು ಹೇಳಿದರು.






