ಬೆಂಗಳೂರು:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದ್ದು, ಇಂದು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ದಸರಾ ಕಾರ್ಯಕ್ರಮಗಳ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

ಈ ಬಾರಿ ದಸರಾ ಮಹೋತ್ಸವವು ಅಕ್ಟೋಬರ್ 11ರಂದು ಬೆಳಗ್ಗೆ 11.50ಕ್ಕೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿ ದಿನ ಅದ್ದೂರಿಯಾಗಿ ಜಂಬೂಸವಾರಿ ನಡೆಯಲಿದೆ. ಜುಲೈ 26ರಂದು ಗಜಪಯಣ ಆರಂಭವಾಗಲಿದ್ದು, ಆಗಸ್ಟ್ 26 ಮೈಸೂರು ಅರಮನೆಯಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ನಡೆಯಲಿದೆ.

ಜಂಬೂಸವಾರಿ ದಿನ ಮಧ್ಯಾಹ್ನ ನಂದಿಧ್ವಜ ಪೂಜೆ ನಡೆಯಲಿದ್ದು, ಬಳಿಕ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನೆರವೇರಲಿದೆ. ಸಭೆಯಲ್ಲಿ ಈ ಬಾರಿ ಮೊದಲ ಬಾರಿಗೆ ದಸರಾ ವೇಳೆ ಅಕ್ಟೋಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ಕಂಬಳ ಆಯೋಜಿಸುವ ಪ್ರಸ್ತಾವನೆಯೂ ಚರ್ಚೆಗೆ ಬಂದಿದೆ. ಕಂಬಳ ಸಮಿತಿ ಇದಕ್ಕಾಗಿ ಪ್ರತ್ಯೇಕ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

ಇದೇ ವೇಳೆ ದಸರಾ ಸಂದರ್ಭದಲ್ಲಿ ಭದ್ರತೆ, ಸ್ವಚ್ಛತೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಿಎಂಗೆ ವಹಿಸುವ ಸಾಧ್ಯತೆ ಇದೆ.





