ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಗಳು ಜೋರಾಗಿವೆ. ಎರಡು ಉಪಚುನಾವಣೆಗಳ ವಿಚಾರದಲ್ಲಿ “ಕೈ” ನಲ್ಲಿ ಆಂತರಿಕ ಕೊತ ಕೊತ ಕುದಿಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿದ್ದ ಅಭಿಷೇಕ್ ದತ್ತ ಹೈಕಮಾಂಡಿಗೆ ಸಲ್ಲಿಸಿರುವ ವರದಿಯಲ್ಲಿ ಕೈ ನಾಯಕರ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಉಲ್ಲೇಖಿಸಿರುವುದು ಕಾಂಗ್ರೆಸ್ ಪಕ್ಷದಲ್ಲಿನ ಅಲ್ಪಸಂಖ್ಯಾತ ನಾಯಕರ ಬುಡವನ್ನೇ ಅಲ್ಲಾಡಿಸುವ ಹಂತಕ್ಕೆ ತಲುಪಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಈ ಬೆಳವಣಿಗೆಯು ಕಾಂಗ್ರೆಸ್ನಲ್ಲಿನ ಅಲ್ಪಸಂಖ್ಯಾತರ ಆತಂಕಕ್ಕೆ ಕಾರಣವಾಗಿದೆ.
ಪ್ರಮುಖವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಜೀರ್ ಅಹ್ಮದ್ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ಕಿತ್ತು ಹಾಕಲಾಗಿದೆ.
ಇದನ್ನೂ ಓದಿ : ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ
ಇನ್ನೂ ನಸೀರ್ ಅಹಮದ್ ಅವರು ಬಾಗಲಕೋಟೆ ಚುನಾವಣಾ ಜವಾಬ್ದಾರಿಯನ್ನು ಹೊತ್ತಿದ್ದರು. ದಾವಣಗೆರೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗುತ್ತೇನೆ ಎಂದು ನಸೀರ್ ಅಹಮದ್ ಕೇಳಿಕೊಂಡಿದ್ದರು. ಆದರೆ ಬಾಗಲಕೋಟೆಯಲ್ಲಿಯೇ ಉಳಿದು ಅಲ್ಲಿಯೇ ಪಕ್ಷಕ್ಕಾಗಿ ಕೆಲಸ ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಮುಖ್ಯಮಂತ್ರಿಗಳ ಸೂಚನೆಯಂತೆ ನಸೀರ್ ಅಹಮದ್ ಬಾಗಲಕೋಟೆಯಲ್ಲಿ 10 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು ಎಂದು ಪಕ್ಷದಲ್ಲಿನ ಬೆಳವಣಿಗೆಗಳ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.
ಮಾಹಿತಿ ಬಿಚ್ಚಿಟ್ಟಿದ್ದ ರಿಜ್ವಾನ್, ಸಲೀಂ..
ಪ್ರಮುಖವಾಗಿ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಅಲ್ಪಸಂಖ್ಯಾತರ ನಾಯಕರ ಪಕ್ಷ ವಿರೋಧಿ ಚಟುವಟಿಕೆಗಳ ಕುರಿತು ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಇಬ್ಬರೂ ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಪಕ್ಷದ ಹಿನ್ನಡೆಗೆ ಒಳಗಿನ ನಾಯಕರೇ ಕಾರಣರಾಗುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದರು.
ಇದಾದ ಬೆನ್ನಲ್ಲೇ ಕಾಂಗ್ರೆಸ್ ಅಲ್ಪಸಂಖ್ಯಾತರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ಪ್ರಸಂಗ ಬಂದಿತ್ತು. ಅಲ್ಲದೆ ಹೀಗೆ ಮುಂದುವರೆದಿರುವ ಈ ಪಕ್ಷ ವಿರೋಧಿ ಕೆಲಸಗಳ ಬಿಸಿ ನಜೀರ್ ಅಹ್ಮದ್ಗೂ ತಟ್ಟಿದ್ದೂ, ಸಚಿವ ಜಮೀರ್ ಅಹ್ಮದ್ ಖಾನ್ಗೂ ತಟ್ಟುವ ಲಕ್ಷಣಗಳು ದಟ್ಟವಾಗಿವೆ.






