ಮಹದಾಯಿ ವನ್ಯಜೀವಿ ಅಭಯಾರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೊಷಿಸಿ ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್ನ ಗೋವಾ ಪೀಠ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಶನಿವಾರ (ಜು.29) ವರದಿಯಾಗಿದೆ.
ಅಭಯಾರಣ್ಯಕ್ಕೆ ಹೀಗೆ ಮಾಡುವುದರಿಂದ ರಾಜ್ಯದ ಮಹತ್ವಾಕಾಂಕ್ಷಿ ಕಳಸಾ-ಬಂಡೂರಿ ಯೋಜನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಮನವಿಯಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಮಹದಾಯಿ ವನ್ಯಜೀವಿ ಅಭಯಾರಣ್ಯ ಪ್ರದೇಶವನ್ನು ಹುಲಿಗಳ ಸಂರಕ್ಷಿತ ಪ್ರದೇಶ ಎಂದು ಘೋಷಿಸುವ ಬಗ್ಗೆ ಅಧಿಸೂಚನೆ ಹೊರಡಿಸಲು ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಗೋವಾ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಂ.ಎಸ್.ಸುನಕ್ ಮತ್ತು ಭರತ್ ದೇಶಪಾಂಡೆ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ಮೂರು ತಿಂಗಳೊಳಗೆ ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ಪೀಠ ಆದೇಶ ನೀಡಿದೆ ಎಂದು ಗೋವಾ ಅಡ್ವೊಕೇಟ್ ಜನರಲ್ ದೇವಿದಾಸ್ ಪಂಗಮ್ ತಿಳಿಸಿದ್ದಾರೆ.
ಮಹದಾಯಿ ವನ್ಯಜೀವಿ ಅಭಯಾರಣ್ಯದಲ್ಲಿ ಅಕ್ರಮ ಬೇಟೆಗಳನ್ನು ತಡೆಯುವ ಶಿಬಿರಗಳನ್ನು ಸ್ಥಾಪಿಸಬೇಕು. ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ನಿಬಂಧನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಪೀಠ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
ಇನ್ನೊಂದೆಡೆ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ಮಹದಾಯಿ ನದಿಯಿಂದ ಮಲಪ್ರಭಾಕ್ಕೆ ನೀರು ತಿರುಗಿಸುವ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಪರಿಸರ ಮತ್ತು ಅರಣ್ಯ ಸಮ್ಮತಿ ಇನ್ನೂ ದೊರೆತಿಲ್ಲ. ಆದ್ದರಿಂದ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಕರ್ನಾಟಕಕ್ಕೆ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗ ಬಾಂಬೆ ಹೈಕೋರ್ಟ್ ಆದೇಶ ಮತ್ತೊಂದು ಅಡ್ಡಗಾಲಾಗುವ ಸಾಧ್ಯತೆಯಿದೆ. ಇದರಿಂದ ಕರ್ನಾಟಕ ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಸಜ್ಜಾಗಬಹುದು ಎನ್ನಲಾಗಿದೆ.
ಮಹದಾಯಿ ವನ್ಯಜೀವಿ ಅಭಯಾರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೊಷಿಸಲು ಈ ಹಿಂದೆ ಗೋವಾ ಸರ್ಕಾರವು ನಿರಾಕರಿಸಿತ್ತು. ಸರ್ಕಾರದ ಈ ನಡೆ ಬಗ್ಗೆ ಗೋವಾ ಪರಿಸರವಾದಿಗಳು ತೀವ್ರ ಅತೃಪ್ತಿ ಹೊರಹಾಕಿದ್ದರು.
ಹುಲಿ ಸಂರಕ್ಷಿತ ಪ್ರದೇಶ ಎಂದು ಘೊಷಿಸುವ ಮೂಲಕ ಕರ್ನಾಟಕ ಮಹದಾಯಿ ನದಿಯಿಂದ ಮಲಪ್ರಭಾಕ್ಕೆ ನೀರನ್ನು ಹರಿಸಲು ತಡೆಯೊಡ್ಡಬಹುದು ಎಂದು ವಾದಿಸಿದ್ದರು. ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸುವುದರಿಂದ ಗೋವಾ ಸರ್ಕಾರ ಅಭಯಾರಣ್ಯದಲ್ಲಿ ಕೈಗೊಳ್ಳುವ ಅನೇಕ ವಾಣಿಜ್ಯ ಚಟುವಟಿಕೆಗಳಿಗೆ ತಡೆ ಒಡ್ಡಿದಂತಾಗುತ್ತದೆ ಎಂದು ಪರಿಸರವಾದಿಗಳು ಹೇಳಿದ್ದರು. ಅದಕ್ಕಾಗಿ ಗೋವಾ ಫೌಂಡೇಷನ್ ಬಾಂಬೆ ಹೈಕೋರ್ಟ್ ಮೊರೆ ಹೋಗಿತ್ತು.
ಈ ಸುದ್ದಿ ಓದಿದ್ದೀರಾ? ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ | ಪ್ರಕರಣ ದಾಖಲಿಸಿದ ಸಿಬಿಐ
208 ಚದರ ಕಿಲೋಮೀಟರ್ಗಳಷ್ಟು ಮಹದಾಯಿ ವನ್ಯಜೀವಿ ಅಭಯಾರಣ್ಯ ಹರಡಿಕೊಂಡಿದ್ದು, ಗೋವಾದ ಈಶಾನ್ಯ ಭಾಗದಲ್ಲಿ ಕರ್ನಾಟಕವನ್ನು ಸಂರ್ಪಸಿದೆ.
ಉತ್ತರ ಗೋವಾದಲ್ಲಿರುವ ಮಹದಾಯಿ ವನ್ಯಜೀವಿ ಅಭಯಾರಣ್ಯವು ಪಶ್ಚಿಮ ಘಟ್ಟದ ಸಾಲಿನಲ್ಲಿದೆ. ರಾಜ್ಯದ ಉತ್ತರಕನ್ನಡದಲ್ಲಿರುವ ಕಾಳಿ ಹುಲಿ ಸಂರಕ್ಷಿತ ಪ್ರದೇಶ, ಪೂರ್ವದಲ್ಲಿ ಭೀಮಗಢ ವನ್ಯಜೀವಿ ಅಭಯಾರಣ್ಯ ಹಾಗೂ ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನದೊಂದಿಗೆ ಸಂಪರ್ಕ ಹೊಂದಿದೆ.