ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅವರ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಮಾತುಗಳು ಜೋರಾಗಿವೆ.2023ರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಸಿಎಂ ಹುದ್ದೆ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ ಮ್ಯಾರಥಾನ್ ಸಭೆಯ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಮತ್ತಷ್ಟು ಗಟ್ಟಿಯಾಗಿದೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ನಿರ್ಧಾರಕ್ಕೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತಿಯಲ್ಲಿ ಸುಮಾರು ಏಳು ಗಂಟೆಗಳ ಕಾಲ ಮಹತ್ವದ ಸಭೆ ನಡೆದಿದೆ ಎನ್ನಲಾಗಿದೆ.2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಜವಾಬ್ದಾರಿ ನೀಡಲು ಮುಂದಾಗಿದೆ ಎಂದು ಮೂಲಗಳು ಹೇಳುತ್ತಿವೆ. ಸಾಮಾಜಿಕ ನ್ಯಾಯ, ಜಾತಿ ಜನಗಣತಿ ಹಾಗೂ ಹಿಂದುಳಿದ ವರ್ಗಗಳ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಅನುಭವ ರಾಷ್ಟ್ರಮಟ್ಟದಲ್ಲಿ ಅಗತ್ಯವಿದೆ ಎಂದು ಹೈಕಮಾಂಡ್ ಮನವೊಲಿಸಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಗೆ ಕಳುಹಿಸಿ ಎಐಸಿಸಿಯಲ್ಲಿ ಪ್ರಮುಖ ಹುದ್ದೆ ನೀಡುವ ಫಾರ್ಮುಲಾ ಚರ್ಚೆಯಲ್ಲಿದೆ. ಜೂನ್ ಎರಡನೇ ವಾರದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಇದೇ ವೇಳೆ ಮುಖ್ಯಮಂತ್ರಿ ನಿವಾಸದಲ್ಲಿ ಸಚಿವ ಸಂಪುಟದ ಉಪಹಾರ ಸಭೆ ಕರೆದಿರುವುದು ರಾಜಕೀಯ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಈ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ವೇಗವಾದ ಬೆಳವಣಿಗೆಗಳು ಸಂಭವಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದಲೇ “ಎರಡೂವರೆ ವರ್ಷ ಸಿದ್ದು, ನಂತರ ಡಿಕೆಶಿ” ಎಂಬ ಅಧಿಕಾರ ಹಂಚಿಕೆ ಸೂತ್ರದ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿತ್ತು. ಇದೀಗ ಹೈಕಮಾಂಡ್ ಆ ಸೂತ್ರಕ್ಕೆ ಅಂತಿಮ ರೂಪ ನೀಡುವತ್ತ ಹೆಜ್ಜೆ ಇಟ್ಟಿದೆ ಎನ್ನಲಾಗುತ್ತಿದೆ.ಆದರೆ ಈ ಬದಲಾವಣೆಯನ್ನು ಯಾವುದೇ ಬಣದ ಗೆಲುವು ಅಥವಾ ಸೋಲಾಗಿ ಬಿಂಬಿಸದಂತೆ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಎಚ್ಚರಿಕೆಯಿಂದ ರಾಜಕೀಯ ಸಮತೋಲನ ಸಾಧಿಸಲು ಪ್ರಯತ್ನಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.





