ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ , ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ಹಾಲಿ ಸಾರಿಗೆ ಸಚಿವರೂ ಆಗಿರುವ ಮಾಜಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಡಳಿತಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಲಂಚಗಾರಿಕೆ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ಸಮಗ್ರ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ದೂರಿನಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮ ಯೋಜನಾ ಸಂಸ್ಥೆಗಳು, ವಿವಿಧ ಯೋಜನಾ ಪ್ರಾಧಿಕಾರಗಳು ಹಾಗೂ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಅಕ್ರಮ ಲೇಔಟ್ ಅನುಮೋದನೆ, ಕಟ್ಟಡ ನಕ್ಷೆಗಳಿಗೆ ಕಾನೂನುಬಾಹಿರ ಅನುಮತಿ, ಸಾರ್ವಜನಿಕ ಆಸ್ತಿಗಳ ದುರುಪಯೋಗ, ಸ್ವಜನಪಕ್ಷಪಾತ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ, ಲಿಂಗಸುಗೂರು ಪಟ್ಟಣ ಯೋಜನಾ ಪ್ರಾಧಿಕಾರದ ಟೌನ್ ಪ್ಲಾನಿಂಗ್ ಅಧಿಕಾರಿಯೊಬ್ಬರು ಲೇಔಟ್ ಅನುಮೋದನೆಗಾಗಿ ₹3.60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ʼಈ ಹಣದಲ್ಲಿ ಸಚಿವರಿಗೂ ಪಾಲು ನೀಡಬೇಕಾಗಿದೆʼ ಎಂದು ಹೇಳಿರುವ ಆರೋಪವಿರುವ ವೈರಲ್ ವಿಡಿಯೋವನ್ನು ಉಲ್ಲೇಖಿಸಿ, ಅದರ ಸತ್ಯಾಸತ್ಯತೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಲಾಗಿದೆ.

ರಾಜ್ಯಪಾಲರು ಈ ಗಂಭೀರ ಆರೋಪಗಳನ್ನು ಪರಿಗಣಿಸಿ, ಕರ್ನಾಟಕ ಸರ್ಕಾರಕ್ಕೆ ತನಿಖೆಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಅಲ್ಲದೇ ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಕಾಪಾಡುವ ಉದ್ದೇಶದಿಂದ ಈ ದೂರನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.






