ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಆಡಳಿತ ಯಂತ್ರದಲ್ಲಿ ತಮ್ಮ ವಿಶ್ವಾಸಾರ್ಹ ತಂಡವನ್ನು ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಪ್ರಮುಖ ಹುದ್ದೆಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಆಡಳಿತದ ಹೊಸ ರೂಪುರೇಷೆ ಸಿದ್ಧಪಡಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಅಥೀಕ್ ಎಲ್.ಕೆ ಅವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಆಡಳಿತಾತ್ಮಕ ಅನುಭವ ಮತ್ತು ಹಣಕಾಸು ಕ್ಷೇತ್ರದ ಪರಿಣತಿ ಹೊಂದಿರುವ ಅಥೀಕ್ ಎಲ್.ಕೆ ಅವರು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಅಧಿಕಾರಿಗಳ ವಲಯದಲ್ಲಿಯೂ ಗುರುತಿಸಿಕೊಂಡಿದ್ದರು. ಬಳಿಕ ಅವರು ಆ ವಲಯದಿಂದ ದೂರವಾಗಿದ್ದರು ಎನ್ನಲಾಗಿತ್ತು. ಇದೀಗ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸದೊಂದಿಗೆ ಮತ್ತೆ ಪ್ರಮುಖ ಹುದ್ದೆ ಪಡೆದಿದ್ದಾರೆ.
ಇದೇ ವೇಳೆ, ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary to CM) ನೇಮಕ ಮಾಡಲಾಗಿದೆ. ರಾಜ್ಯ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ತುಷಾರ್ ಗಿರಿನಾಥ್ ಅವರ ನೇಮಕಾತಿ ಮಹತ್ವ ಪಡೆದಿದೆ.ಮತ್ತೊಂದೆಡೆ, ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ಪಿ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ (Secretary to CM) ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಕಚೇರಿಯ ದೈನಂದಿನ ಆಡಳಿತ, ಸಮನ್ವಯ ಮತ್ತು ನೀತಿ ಜಾರಿಗೆ ಸಂಬಂಧಿಸಿದ ಪ್ರಮುಖ ಜವಾಬ್ದಾರಿಗಳನ್ನು ಅವರು ನಿರ್ವಹಿಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ತಮ್ಮದೇ ಆಡಳಿತಾತ್ಮಕ ತಂಡವನ್ನು ರೂಪಿಸುತ್ತಿರುವುದು ಸ್ಪಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಹುದ್ದೆಗಳಲ್ಲಿ ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ. ಹೊಸ ಸರ್ಕಾರದ ಆಡಳಿತ ಶೈಲಿ ಮತ್ತು ಕಾರ್ಯಕ್ಷಮತೆ ಮೇಲೆ ಈ ನೇಮಕಾತಿಗಳು ಮಹತ್ವದ ಪ್ರಭಾವ ಬೀರುವ ನಿರೀಕ್ಷೆ ವ್ಯಕ್ತವಾಗಿದೆ.






