ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಮ್ಮ ಬಹುಕಾಲದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವ ಗುರಿಯೊಂದಿಗೆ ದೀರ್ಘ ರಾಜಕೀಯ ಪಯಣ ನಡೆಸಿದ್ದ ಡಿಕೆಶಿಗೆ ಜೂನ್ 3ರ ದಿನ ಐತಿಹಾಸಿಕ ಕ್ಷಣವಾಗಿ ಪರಿಣಮಿಸಿದೆ.
ಬೆಂಗಳೂರು ಲೋಕಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಂಬಂಧಿಕರು, ರಾಜಕೀಯ ನಾಯಕರು, ಸಿನಿತಾರೆಯರು, ಸ್ವಾಮೀಜಿಗಳು ಹಾಗೂ ಸಾವಿರಾರು ಬೆಂಬಲಿಗರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಅವರ ಈ ಸಾಧನೆಗೆ ವಿವಿಧ ಕ್ಷೇತ್ರಗಳ ಗಣ್ಯರು ಶುಭಾಶಯ ಕೋರಿದ್ದು, ರಾಜ್ಯಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಯಿತು.
ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ವಿಶೇಷ ಸಂದೇಶ ಹಂಚಿಕೊಂಡಿದ್ದಾರೆ. ಪ್ರಮಾಣವಚನದ ಚಿತ್ರಗಳನ್ನು ಪೋಸ್ಟ್ ಮಾಡಿರುವ ಅವರು, ಭಗವದ್ಗೀತೆಯ ಪ್ರಸಿದ್ಧ ಶ್ಲೋಕವೊಂದನ್ನು ಉಲ್ಲೇಖಿಸಿದ್ದಾರೆ.
“ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ |
ಮಾ ಕರ್ಮಫಲಹೇತುರ್ಭೂರ್ ಮಾ ತೇ ಸಂಗೋಸ್ತ್ವ ಕರ್ಮಣಿ ||”
ಈ ಶ್ಲೋಕವು ಶ್ರೀಮದ್ಭಗವದ್ಗೀತೆಯ ಎರಡನೇ ಅಧ್ಯಾಯದ 47ನೇ ಶ್ಲೋಕವಾಗಿದ್ದು, ಕರ್ಮಯೋಗದ ಸಾರವನ್ನು ತಿಳಿಸುತ್ತದೆ. ಕರ್ತವ್ಯ ನಿರ್ವಹಣೆಯ ಮೇಲೆಯೇ ಮಾನವನ ಹಕ್ಕಿದ್ದು, ಫಲದ ಮೇಲೆ ಆಸಕ್ತಿ ಇರಬಾರದು ಎಂಬ ಸಂದೇಶವನ್ನು ಈ ಶ್ಲೋಕ ಸಾರುತ್ತದೆ.
ಇನ್ನು, ಡಿಕೆ ಶಿವಕುಮಾರ್ ಅವರ ಆಧ್ಯಾತ್ಮಿಕ ನಂಬಿಕೆಯ ಕೇಂದ್ರವಾಗಿರುವ ತುಮಕೂರು ಜಿಲ್ಲೆಯ ನೊಣವಿನಕೆರೆಯ ಅಜ್ಜಯ್ಯ ಮಠದ ಆಶೀರ್ವಾದವೂ ಈ ಮಹತ್ವದ ಕ್ಷಣದಲ್ಲಿ ವಿಶೇಷವಾಗಿತ್ತು. ಡಿಕೆಶಿಯ ರಾಜಕೀಯ ಜೀವನದ ಪ್ರಮುಖ ನಿರ್ಧಾರಗಳ ಹಿಂದೆ ಅಜ್ಜಯ್ಯನ ಮಾರ್ಗದರ್ಶನವಿದೆ ಎಂಬ ನಂಬಿಕೆ ಅವರಲ್ಲಿದೆ. ಪ್ರಮಾಣವಚನ ಸಮಾರಂಭ ನಡೆಯುತ್ತಿದ್ದ ವೇಳೆಯಲ್ಲೇ
ನೊಣವಿನಕರೆ ಶ್ರೀಗಳು ವಿಧಾನಸೌಧಕ್ಕೆ ಭೇಟಿ ನೀಡಿ ಆಶೀರ್ವದಿಸಿದ್ದು ಗಮನ ಸೆಳೆಯಿತು.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು ತಮ್ಮ ನಾಯಕನ ಸಾಧನೆಯನ್ನು ಸಂಭ್ರಮಿಸಿದರು.
ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವನ್ನು ರಾಜ್ಯದ 230ಕ್ಕೂ ಹೆಚ್ಚು ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ ಮಾಡಲಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸೇರಿದಂತೆ ಹಲವು ಕಡೆಗಳಲ್ಲಿ ಬೃಹತ್ ಎಲ್ಇಡಿ ಪರದೆಗಳನ್ನು ಅಳವಡಿಸಿ ಸಾರ್ವಜನಿಕರಿಗೆ ನೇರ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿತ್ತು. ಹಲವೆಡೆ ಅಭಿಮಾನಿಗಳಿಗೆ ಬಿರಿಯಾನಿ ಊಟ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿಕೆ ಶಿವಕುಮಾರ್ ಅವರ ಮುಂದಿನ ಆಡಳಿತ ಹೇಗಿರಲಿದೆ ಎಂಬುದರ ಬಗ್ಗೆ ರಾಜ್ಯದ ಜನರಲ್ಲಿ ಕುತೂಹಲ ಮೂಡಿದ್ದು, ಹೊಸ ಸರ್ಕಾರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ.






