ಬೆಂಗಳೂರು: ವಿಡಿಯೋ ಪ್ರಕರಣಕ್ಕೆ (Prajwal Video Case) ಸಂಬಂಧಿಸಿದಂತೆ ಈಗಾಗಲೇ ಎಸ್ ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಮೇ. 10 ರೊಳಗಾಗಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ.
ಈಗ ಅವರು ವಿದೇಶದಲ್ಲಿಯೇ ಇದ್ದುಕೊಂಡು ವಕೀಲರ ಸಲಹೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ವಿದೇಶಕ್ಕೆ ಹಾರಿದ್ದಾರೆ. ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ಈಗ ವಕೀಲರ ಸಲಹೆಯಂತೆ ಮೇ 10ರೊಳಗೆ ಮರಳಿ ಆಗಮಿಸಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಇನ್ನೊಂದೆಡೆ ರೇವಣ್ಣಗೆ ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಈ ಕುರಿತು ಜನಪ್ರತಿನಿದಿಗಳ ವಿಶೇಷ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ವಿರುದ್ಧ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಮಹಿಳೆಯ ಕಿಡ್ನಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಎರಡನೇ ಆರೋಪಿಯನ್ನು ಈಗಾಗಲೇ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ರೇವಣ್ಣ ಕರೆತರಲು ಹೇಳಿದ್ದಾರೆಂದು ಸಂತ್ರಸ್ತ ಮಹಿಳೆಯನ್ನು ಎರಡನೇ ಆರೋಪಿ ಸತೀಶ್ ಬಾಬು ಕರೆದೊಯ್ದಿದ್ದ ಎಂಬುವುದಾಗಿ ಮಹಿಳೆಯ ಪುತ್ರ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು, ತೀರ್ಪು ನೋಡಿಕೊಂಡು ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಎಸ್ ಐಟಿ ವಿಚಾರಣೆಗೆ ಹಾಜರಾಗಲು ಈಗಾಗಲೇ ರೇವಣ್ಣಗೆ ನೋಟಿಸ್ ನೀಡಲಾಗಿದೆ. ಇಂದು ನಿರೀಕ್ಷಣಾ ಜಾಮೀನು ಸಿಕ್ಕಿದರೆ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.