ಚಾಮರಾಜನಗರ: ಹನೂರು ತಾಲೂಕಿನ ಗುಂಡೇಟು ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಸಾಕ್ಷ್ಯಗಳ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ.

ಕಳೆದೆರಡು ದಿನಗಳಿಂದ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಈ ಪ್ರಕರಣ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ವಿಪಕ್ಷ ನಾಯಕರು ಇದು ನಕಲಿ ಎನ್ಕೌಂಟರ್ ಎಂದು ಆರೋಪಿಸಿದರೆ, ಅರಣ್ಯ ಇಲಾಖೆ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದರು.

ಆದರೆ, ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಫೋಟೋಗಳಲ್ಲಿ ಕಂಡುಬಂದ ಹೊಸ ಚಪ್ಪಲಿಯ ಮೇಲಿನ ಸ್ಟಿಕ್ಕರ್ ತೆಗೆಯದೇ ಇರುವುದು ಅನುಮಾನಕ್ಕೆ ಕಾರಣವಾಗಿದ್ದು, ಸಾಕ್ಷ್ಯಗಳನ್ನು ಕೃತಕವಾಗಿ ಸೃಷ್ಟಿಸಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಕೇಳಿಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಫ್ಎಸ್ಎಲ್ ಹಾಗೂ ಬ್ಯಾಲೆಸ್ಟಿಕ್ ತಜ್ಞರ ವಿಶೇಷ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗುಂಡಿನ ಚೂರುಗಳು, ರಕ್ತದ ಮಾದರಿ ಸೇರಿದಂತೆ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದೆ. ತನಿಖೆಯ ವರದಿ ಬಳಿಕ ಪ್ರಕರಣದ ನಿಜಾಂಶ ಬಹಿರಂಗವಾಗುವ ಸಾಧ್ಯತೆ ಇದೆ.







