ನವದೆಹಲಿ: DySP ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ಸಿಬಿಐ ವರದಿ ಎತ್ತಿಹಿಡಿದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸಿಬಿಐ ಕ್ರಮ ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಹಾಗು ಮತ್ತಿತರರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಸಚಿವ ಕೆ.ಜೆ ಜಾರ್ಜ್ ಅವರಿಗೆ ಅಂಟಿದ್ದ ಕಳಕ ನಿವಾರಣೆ ಆದಂತೆ ಆಗಿದೆ.

ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ಕ್ರಮವನ್ನು ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಹಾಗು ಮತ್ತಿತರರು ಸಲ್ಲಿಸಿದ್ದ ವಿಶೇಷ ಕ್ರಿಮಿನಲ್ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಜಾಗೊಳಿಸಿ ಆದೇಶ ಮಾಡಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎಂಟು ವರ್ಷಕ್ಕೂ ಹೆಚ್ಚು ಕಾಲ ನಡೆದ ಕಾನೂನು ಸಂಘರ್ಷದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಗೆಲುವು ಲಭಿಸಿದೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರಿಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐನ ನಿರ್ಧಾವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಂತಾಗಿದೆ.

2016ರ ಜುಲೈ17ರಂದು ಡಿವೈಎಸ್ಪಿ ಎಂ.ಕೆ.ಗಣಪತಿ ಕೊಡಗಿನ ಹೋಟೆಲ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋದಲ್ಲಿ ಅವರು ಅಂದಿನ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಹೀಗಾಗಿ ಸಚಿವರ ಕಿರುಕುಳದಿಂದ ಬೇಸತ್ತು ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಸಿಬಿಐ, 2019ರಲ್ಲಿ ವರದಿ ನೀಡಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೆ ಕಿರುಕುಳ ಕಾರಣವಲ್ಲ. ಬದಲಾಗಿ ಒಂದೆರಡು ಬಾರಿ ಸಚಿವ ಜಾರ್ಜ್ ಅವರು ಗಣಪತಿಗೆ ನೆರವು ನೀಡಿದ್ದರು ಎಂದು ಹೇಳಿತ್ತು.
ಗೃಹ ಸಚಿವರಾಗಿದ್ದ ಕೆ.ಜೆ ಜಾರ್ಜ್ ಮಂಗಳೂರಿಗೆ ಬಂದಿದ್ದ ವೇಳೆ ಕ್ರೈಸ್ತ ಸಂಘಟನೆಗಳು ಗಣಪತಿ ವಿರುದ್ಧ ದೂರು ನೀಡಿದ್ದವು. ಇದನ್ನೇ ಕಾರಣವಾಗಿಟ್ಟುಕೊಂಡು ದ್ವೇಷ ಸಾಧಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಭಾವಿಸಿದ್ದನ್ನು ಒಪ್ಪಲು ಸಾಧ್ಯವಿಲ್ಲ. ಅಲ್ಲದೆ, ಈ ಪ್ರಕರಣ 2011ರಲ್ಲೇ ಮುಕ್ತಾಯಗೊಂಡಿತ್ತು. ಆದರೂ ಐದು ವರ್ಷಗಳ ಬಳಿಕ ಸಚಿವ ಕೆ.ಜೆ ಜಾರ್ಜ್ K.J George ಮೇಲೆ ಆರೋಪ ಮಾಡಿರುವುದಕ್ಕೆ ಯಾವುದೇ ಮಹತ್ವವಿಲ್ಲ ಎಂದೂ ಸಿಬಿಐ ಸ್ಪಷ್ಟಪಡಿಸಿತ್ತು. ಜೊತೆಗೆ ಬೆಂಗಳೂರು ಅಪರಾಧ ವಿಭಾಗದ ಐ.ಜಿ ಪ್ರಣಬ್ ಮೊಹಂತಿ ಹಾಗೂ ಮಂಗಳೂರು ಐ.ಜಿ ಆಗಿದ್ದ ಎ.ಎಂ. ಪ್ರಸಾದ್ ಅವರ ವಿರುದ್ಧ ಗಣಪತಿ ಮಾಡಿರುವ ಆರೋಪಗಳಲ್ಲೂ ಹುರುಳಿಲ್ಲ ಎಂದು ಹೇಳಿತ್ತು.
Also Read : ಗಣಪತಿ ಆತ್ಮಹತ್ಯೆಗೆ ಜಾರ್ಜ್ ಕಾರಣರಲ್ಲ, ಡಿಪ್ರೆಶನ್ ಕಾರಣ: ಸಿಬಿಐ ರಿಪೋರ್ಟ್

ಇದಕ್ಕೂ ಮೊದಲು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ವಿಚಾರಣೆಗೆ ನ್ಯಾ. ಕೆ.ಎನ್. ಕೇಶವ ನಾರಾಯಣ ನೇತೃತ್ವದಲ್ಲಿ ರಚಿಸಿದ್ದ ಏಕಸದಸ್ಯ ಆಯೋಗವು 2018ರ ಫೆಬ್ರವರಿ 27ರಂದು ಸರಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಅದರಂತೆ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ, ಎ.ಎಂ. ಪ್ರಸಾದ್ಗೆ ಈ ವರದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿತ್ತು.
ಆದರೂ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಮತ್ತಿತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ದೇಶದ ಅತ್ಯುನ್ನತ ನ್ಯಾಯಾಲಯ ಆಗಿರುವ ಸುಪ್ರೀಂಕೋರ್ಟ್ ಆದೇಶ ನೀಡಿದ್ದು ಗಣಪತಿ ಆತ್ಮಹತ್ಯೆಗೂ ಸಚಿವ ಕೆ.ಜೆ ಜಾರ್ಜ್ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ತೀರ್ಪು ನೀಡಿದೆ.

Also Read : ಗಣಪತಿ ಆತ್ಮಹತ್ಯೆಗೆ ಜಾರ್ಜ್ ಕಾರಣರಲ್ಲ, ಡಿಪ್ರೆಶನ್ ಕಾರಣ: ಸಿಬಿಐ ರಿಪೋರ್ಟ್