ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ ಸ್ವೀಕರಿಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಂಡ ಕೆಲ ಸಿಬ್ಬಂದಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ ಸ್ವೀಕರಿಸಲು ವಿಧಾನಸೌಧಕ್ಕೆ ಬಂದ ಸಿಎಂ ಅವರನ್ನು ಮುಖ್ಯಮಂತ್ರಿ ಕಚೇರಿಯ ನೌಕರರು ಹಾಗೂ ಗುತ್ತಿಗೆ ಆಧಾರಿತ ಸಿಬ್ಬಂದಿ ಸುತ್ತುವರಿದರು. ಈ ವೇಳೆ, “ಸರ್, ದಯವಿಟ್ಟು ರಾಜೀನಾಮೆ ನೀಡಬೇಡಿ” ಎಂದು ಸಿಬ್ಬಂದಿ ಕೈಮುಗಿದು ಮನವಿ ಮಾಡುತ್ತಾ ಭಾವುಕರಾದರು.ಸಿಬ್ಬಂದಿಯ ಭಾವನಾತ್ಮಕ ಪ್ರತಿಕ್ರಿಯೆಯನ್ನು ಗಮನಿಸಿದ ಸಿದ್ದರಾಮಯ್ಯ ಅವರು ತಮ್ಮ ವಿಶಿಷ್ಟ ಕೈಸನ್ನೆಯ ಮೂಲಕ ಸಮಾಧಾನಪಡಿಸಿ ಧೈರ್ಯ ತುಂಬಿದರು. ಸಿಎಂ ಕಚೇರಿ ಇತಿಹಾಸದಲ್ಲೇ ಇಂತಹ ಭಾವುಕ ಕ್ಷಣ ಅಪರೂಪ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ರಾಜೀನಾಮೆ ನಿರ್ಧಾರ ತಡೆಯಲು ಸಚಿವರು ಹಾಗೂ ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರಾದ ಬೈರತಿ ಸುರೇಶ್ ಹಾಗೂ ಕೆ ಜೆ ಜಾರ್ಜ್ ಅವರು ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.“ಹೈಕಮಾಂಡ್ ಒತ್ತಡಕ್ಕೆ ಮಣಿದು ತಕ್ಷಣ ರಾಜೀನಾಮೆ ನೀಡಬೇಡಿ. ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಶಾಸಕರ ಅಭಿಪ್ರಾಯ ಕೇಳಿದ ಬಳಿಕವೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು” ಎಂದು ಸಚಿವರು ಸಿಎಂ ಮುಂದೆ ಬಲವಾದ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.






