ಕಳೆದ ಮಾರ್ಚ್ನಿಂದ COVID-19 ಸಾಂಕ್ರಾಮಿಕ ಸಮಯದಲ್ಲಿ ಅನಾಥರಾದ ಅಥವಾ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಅದೇ ಶಾಲೆಯಲ್ಲಿ ಶಿಕ್ಷಣ ಮುಂದುವರಿಸಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.ಅದು ಖಾಸಗಿ ಅಥವಾ ಸರ್ಕಾರಿ ಶಾಲೆಯಾಗಿದ್ದರೂ, ಕನಿಷ್ಠ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಾದರೂ ಶಿಕ್ಷಣ ಮುಂದುವರೆಸಲು ಅವಕಾಶ ನೀಡಬೇಕು ಎಂದಿದೆ.
ಕೋವಿಡ್ -19 ರ ಸಾಂಕ್ರಾಮಿಕ ರೋಗದ ಬಗ್ಗೆ ಸು-ಮೋಟೋ (Suo-moto) ಆಲಿಸುತ್ತಿದ್ದ ಸುಪ್ರೀಂ ಕೋರ್ಟ್ ತಾನು ಜೂನ್ 7 ರ ಆದೇಶದಲ್ಲಿ ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಯಾವುದೇ ತಡೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು (UT) ಕೇಳಿಕೊಂಡಿದೆ ಎಂದು ಹೇಳಿದೆ.
ಸರ್ಕಾರಿ ಅಥವಾ ಖಾಸಗಿ ಶಾಲೆಯೇ ಆಗಿದ್ದರೂ ಅನಾಥರಿಗೆ ಕನಿಷ್ಠ ಈ ಶೈಕ್ಷಣಿಕ ವರ್ಷದಲ್ಲಿ ಅದೇ ಶಾಲೆಗಳಲ್ಲಿ ಮುಂದುವರಿಯಲು ಅನುಮತಿ ನೀಡಬೇಕೆಂದು ನಾವು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುತ್ತೇವೆ ಎಂದು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ವಕೀಲ ಗೌರವ್ ಅಗರ್ವಾಲ್ ಅವರು ಅಂತಹ ಮಕ್ಕಳ ಶಿಕ್ಷಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಉನ್ನತ ನ್ಯಾಯಾಲಯವು ಈ ನಿರ್ದೇಶನವನ್ನು ಅಂಗೀಕರಿಸಿತು.
ಒಂದು ವೇಳೆ, ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಅನುಮತಿ ನೀಡುವುದರಲ್ಲಿ ತೊಂದರೆ ಇದೆ ಎಂದಾದರೆ ಶಿಕ್ಷಣ ಹಕ್ಕು ಕಾಯ್ದೆಯಡಿ ನೆರೆಹೊರೆಯ ಶಾಲೆಗಳಲ್ಲಿ ಅವರಿಗೆ ಅವಕಾಶ ಕಲ್ಪಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಖಾಸಗಿ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳಲ್ಲಿ ವಸತಿ ಪಡೆದ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ರಾಜ್ಯ ಸರ್ಕಾರವು ಒದಗಿಸಲಿದೆ ಎಂದು ನ್ಯಾಯಪೀಠ ಹೇಳಿದೆ ಮತ್ತು ಈ ವಿಷಯದ ಬಗ್ಗೆ ಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ. ಹೆಚ್ಚಿನ ವಿಚಾರಣೆಗೆ ನ್ಯಾಯಾಲಯವು ಆಗಸ್ಟ್ 26ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಬಾಲ್ ಸ್ವರಾಜ್ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನೀಡಿದ ಮಾಹಿತಿಯ ಪ್ರಕಾರ ಕೋವಿಡ್ನಿಂದ 30,071 ಮಕ್ಕಳು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಅಥವಾ ಸಾಂಕ್ರಾಮಿಕ ರೋಗದಿಂದಾಗಿ ಕುಟುಂಬದಿಂದ ತ್ಯಜಿಸಲ್ಪಟ್ಟಿದ್ದಾರೆ ಎಂದು ಮಕ್ಕಳ ಹಕ್ಕುಗಳ ಸಂರಕ್ಷಣಾ ರಾಷ್ಟ್ರೀಯ ಆಯೋಗ (ಎನ್ಸಿಪಿಸಿಆರ್) ಕಳೆದ ತಿಂಗಳು ನ್ಯಾಯಪೀಠಕ್ಕೆ ತಿಳಿಸಿತ್ತು. ಅದು ತನ್ನ ಅಫಿಡವಿಟ್ನಲ್ಲಿ ಕೋವಿಡ್ನಿಂದಾಗಿ 3,621 ಮಕ್ಕಳು ಅನಾಥರಾಗಿದ್ದಾರೆ, 26,176 ಮಕ್ಕಳು ಒಬ್ಬ ಪೋಷಕರನ್ನು ಕಳೆದುಕೊಂಡಿದ್ದಾರೆ ಮತ್ತು 274 ಮಕ್ಕಳು ಕುಟುಂಬದಿಂದ ಪರಿತ್ಯಕ್ಯರಾಗಿದ್ದಾರೆ ಎಂದು ಹೇಳಿತ್ತು. ಈ ಬಗ್ಗೆ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ತನ್ನ ಜೂನ್ 7 ರ ಆದೇಶದಲ್ಲಿ ಅಂತಹ ಮಕ್ಕಳ ಶಿಕ್ಷಣವನ್ನು ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮುಂದುವರೆಸಲು ಅವಕಾಶ ನೀಡುವಂತೆ ಆದೇಶ ನೀಡಿತ್ತು. ಅಲ್ಲದೆ ಅನಾಥರಾದ ಅಥವಾ ಒಬ್ಬ ಪೋಷಕರನ್ನು ಕಳೆದುಕೊಂಡಿರುವ ಅಥವಾ ಪರಿತ್ಯಕ್ತಗೊಂಡ ಮಕ್ಕಳ ಆರೈಕೆ ಮತ್ತು ರಕ್ಷಣೆಗಾಗಿ ಇದು ಈ ಹಿಂದೆ ಸಾಕಷ್ಟು ನಿರ್ದೇಶನಗಳನ್ನು ನೀಡಿದೆ. ಸಾಂಕ್ರಾಮಿಕ ಸಮಯದಲ್ಲಿ ಅನಾಥ ಮಕ್ಕಳನ್ನು ಅಕ್ರಮವಾಗಿ ದತ್ತು ತೆಗೆದುಕೊಳ್ಳುವ ಎನ್ಜಿಒಗಳು ಮತ್ತು ವ್ಯಕ್ತಿಗಳ ವಿರುದ್ಧ ಸಹ ಕಠಿಣ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಯುಟಿಗಳಿಗೆ ನಿರ್ದೇಶನ ನೀಡಿತ್ತು.