ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸಮೀಪದ ಸೂರ್ಯನಗರ ನಾಲ್ಕನೇ ಹಂತ (ಇಂಡ್ಲವಾಡಿ) ಪ್ರದೇಶದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷ ತೀವ್ರವಾಗಿ ವಿರೋಧಿಸಿದೆ.ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಆರ್ಎಸ್ ಪಕ್ಷದ ಕಾರ್ಯಾಧ್ಯಕ್ಷ ರಘು ಜಾಣಗೆರೆ ಹಾಗೂ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವು ರಾಜ್ಯದ ಪ್ರಮುಖ ಜೀವವೈವಿಧ್ಯ ತಾಣವಾಗಿದ್ದು, ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಪರಿಸರ ಕೊಂಡಿಯಾಗಿದೆ ಎಂದು ತಿಳಿಸಿದರು.

ಇಂತಹ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬೃಹತ್ ಕ್ರೀಡಾಂಗಣ ನಿರ್ಮಾಣ ಮಾಡುವುದರಿಂದ ವನ್ಯಜೀವಿಗಳ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.ಸ್ಟೇಡಿಯಂನಲ್ಲಿ ಅಳವಡಿಸುವ ಫ್ಲಡ್ಲೈಟ್ಗಳು, ಪಂದ್ಯಾವಳಿ ಸಂದರ್ಭದ ಭಾರಿ ಜನಸಂದಣಿ, ವಾಹನ ದಟ್ಟಣೆ ಹಾಗೂ ಪ್ರೇಕ್ಷಕರ ಗದ್ದಲದಿಂದ ಕಾಡಿನಲ್ಲಿರುವ ಪ್ರಾಣಿ-ಪಕ್ಷಿಗಳ ಸ್ವಾಭಾವಿಕ ಜೀವನ ಕ್ರಮಕ್ಕೆ ಅಡ್ಡಿಯಾಗಲಿದೆ ಎಂದು ಅವರು ಹೇಳಿದರು.
ಇದರ ಜೊತೆಗೆ, ಈ ಪ್ರದೇಶ ಕ್ರಮೇಣ ನಗರೀಕರಣ ಮತ್ತು ವಾಣಿಜ್ಯ ಚಟುವಟಿಕೆಗಳ ಕೇಂದ್ರವಾಗುವ ಅಪಾಯವಿದ್ದು, ಪರಿಸರ ಸಮತೋಲನಕ್ಕೆ ಧಕ್ಕೆಯಾಗಲಿದೆ ಎಂದು ಎಚ್ಚರಿಸಿದರು.

ರಾಜ್ಯದ ಲಕ್ಷಾಂತರ ಜನರಿಗೆ ವಸತಿ ಸೌಲಭ್ಯ ಒದಗಿಸಲು ಸಾಧ್ಯವಾಗದ ಕರ್ನಾಟಕ ಗೃಹ ಮಂಡಳಿ ಈಗ ಪರಿಸರಕ್ಕೆ ಹಾನಿಕಾರಕವಾಗುವ ಯೋಜನೆಗೆ ಮುಂದಾಗಿರುವುದು ಸರಿಯಲ್ಲ ಎಂದು ಕೆಆರ್ಎಸ್ ನಾಯಕರು ಟೀಕಿಸಿದರು.ಬೆಂಗಳೂರು ಉತ್ತರ ತಾಲ್ಲೂಕಿನ ಆಲೂರಿನಲ್ಲಿ ಈಗಾಗಲೇ ಕೆಎಸ್ಸಿಎ ಮೈದಾನ ಹಾಗೂ ಯಲಹಂಕದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ‘ಸೆಂಟರ್ ಆಫ್ ಎಕ್ಸಲೆನ್ಸ್’ ಮೈದಾನಗಳಂತಹ ಅಗತ್ಯ ಮೂಲಸೌಕರ್ಯಗಳು ಲಭ್ಯವಿವೆ. ಹೀಗಾಗಿ ಹೊಸ ಕ್ರೀಡಾಂಗಣ ನಿರ್ಮಿಸುವ ಬದಲು ಈಗಿರುವ ಸೌಲಭ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.






