ಲೋಕಸಭಾ(Loka Saba) ಚುನಾವಣೆಗೆ ತಿಂಗಳುಗಳಷ್ಟೇ ಬಾಕಿ ಉಳಿದಿದ್ದು, ಟಿಕೆಟ್ ಆಕಾಂಕ್ಷಿಗಳ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ಕೊನೆಯ ಹಂತದ ತಯಾರಿಗಳು ನಡೆಯುತ್ತಿವೆ. ಈ ನಡುವೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ(BJP Karnataka) ಅಭ್ಯರ್ಥಿ ರೇಸ್ಗೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ(JC Maadhuswamy) ಕೂಡ ಎಂಟ್ರಿಯಾಗಿದ್ದಾರೆ.
ಇತ್ತೀಚೆಗಷ್ಟೇ ಮಾಜಿ ಸಚಿವ ವಿ. ಸೋಮಣ್ಣ(V Somanna) ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬೆನ್ನಲ್ಲೇ ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ರೇಸ್ನಲ್ಲಿ ಮಾಧುಸ್ವಾಮಿ ಅವರ ಹೆಸರು ಕೂಡ ಕೇಳಿ ಬರಲಾರಂಭಿಸಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹಾದಿಯೂ ಬಹುತೇಕ ಸುಗಮವಾಗಿರುವಂತೆ ಕಾಣುತ್ತಿದೆ.
ಒಂದೆಡೆ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕೆಂಬ ನಿಟ್ಟಿನಲ್ಲಿ ಸಂಸದ ಬಸವರಾಜು, ಶಾಸಕ ಸುರೇಶ್ ಗೌಡ ಸೇರಿದಂತೆ ಒಂದು ಬಣದ ಹಲವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಬಲ ಹೊಂದಿರುವ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕೂಡ ಟಿಕೆಟ್ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದಾರೆ ಎನ್ನಲಾಗಿದೆ.