ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ, ಪೊಲೀಸ್ ಭದ್ರತೆಯನ್ನು ಕೂಡಾ ಹೆಚ್ಚಿಸಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ದೆಹಲಿಯ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಗುರುವಾರದಮದು ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
50,000ಕ್ಕೂ ಹೆಚ್ಚು ರೈತರು ದೆಹಲಿಯನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ ಎಂಬ ಗುಪ್ತಚರ ದಳದ ಮಾಹಿತಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಪಾನಿಪತ್ ಟೋಲ್ ಪ್ಲಾಜಾದಿಂದ ಸಿಂಘು ಗಡಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ. ಆದರೆ, ಗುಪ್ತಚರ ದಳವು ನೀಡಿದ ಮಾಹಿತಿಯ ಪ್ರಕಾರ ಈ ರೈತರು ಹಿಡಿದಿರುವ ಪೋಸ್ಟರ್’ಗಳು ದೆಹಲಿಯನ್ನು ಪ್ರವೇಶಿಸಲು ಪ್ರಯತ್ನಿಸಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿವೆ, ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
“ದಿನದ ಇಪ್ಪತ್ತನಾಲ್ಕು ಗಂಟೆಯೂ, ಸಿಂಘು, ಗಾಝೀಪುರ್, ಟಿಕ್ರಿ ಗಡಿಗಳಲ್ಲಿ ದೆಹಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಎಚ್ಚರಿಕಾ ಕ್ರಮವಾಗಿ ಈಗ ಪೊಲೀಸ್ ಪಡೆಯ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ದೆಹಲಿಯ ಆಂತರಿಕ ಹಾಗೂ ಇತರೆಡೆಗಳಲ್ಲಿನ ಪೊಲಿಸರನ್ನು ದೆಹಲಿಯ ಗಡಿ ಭಾಗಗಳಿಗೆ ರವಾನಿಸಲಾಗಿದೆ,” ಎಂದು ಅವರು ಹೇಳಿದ್ದಾರೆ.
ಪೊಲೀಸರ ಈ ವಾದವನ್ನು ಅಲ್ಲಗೆಳೆದಿರುವ ರೈತ ಮುಖಂಡರು, ಬಲವಂತವಾಗಿ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವ ಇರಾದೆ ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ದ ರೈತರು ಕಳೆದ ಆರು ತಿಂಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯಗಳಿಗೆ ಉತ್ತೇಜನ ಮತ್ತು ಸೌಕರ್ಯ ಕಲ್ಪಿಸಿ ಕೊಡುವ ಕಾನೂನು, ರೈತರಿಗೆ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾನೂನು, ಅಗತ್ಯ ಸರಕುಗಳ (ತಿದ್ದುಪಡಿ) ಕಾನೂನುಗಳನ್ನು ವಾಪಾಸ್ ಪಡೆಯುವವರೆಗೂ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ ಎಂದು ರೈತರು ಖಡಾಖಂಡಿತವಾಗಿ ಹೇಳಿದ್ದಾರೆ.






