ಬೆಂಗಳೂರು: ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾ. ಮುಖ್ಯಮಂತ್ರಿ ಚಂದ್ರು ಅಭಿನಂದನೆ ಸಲ್ಲಿಸಿದ್ದಾರೆ.

ಭೀಕರ ಬರಗಾಲದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬರೋಬ್ಬರಿ 7 ತಿಂಗಳ ಬಳಿಕ ರೂ. 3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ನಿರಂತರ ಮನವಿಗಳಿಗೆ ಸ್ಪಂದಿಸದೆ, ಕೇಂದ್ರದ ಅಧ್ಯಯನ ತಂಡವೇ ರಾಜ್ಯಕ್ಕೆ ರಾಜ್ಯವೇ ಬರಕ್ಕೆ ತುತ್ತಾಗಿದೆ ಎಂಬ ವರದಿ ಕೊಟ್ಟರೂ ಬರ ಪರಿಹಾರ ಬಿಡುಗಡೆ ಮಾಡದೆ ಸತಾಯಿಸುತ್ತಿದ್ದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದಿಟ್ಟತನದಿಂದ ನ್ಯಾಯಯುತ ಹೋರಾಟ ನಡೆಸಿ, ಕೇಂದ್ರದಿಂದ ಬರ ಪರಿಹಾರ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಬರ ಪರಿಹಾರಕ್ಕಾಗಿ ಬೇಡಿಕೆ ಇಟ್ಟಾಗ ತಕ್ಷಣವೇ ಬರ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿರುತ್ತಿದ್ದರೆ ರಾಜ್ಯ ಸರ್ಕಾರವು ಇಂದು ಸುಪ್ರೀಂ ಕೋರ್ಟ್ ಗೆ ಹೋಗಿ ತನ್ನ ಹಕ್ಕನ್ನು ಪಡೆಯಬೇಕಾದ ಪ್ರಮೇಯವೇ ಇರುತಿರಲಿಲ್ಲ. ಸುಪ್ರೀಂ ಕೋರ್ಟ್ ಗೆ ಹೋಗಿ ರಾಜ್ಯದ ಹಕ್ಕಿನ ಪರಿಹಾರ ತಂದ ಕರ್ನಾಟಕ ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ರಾಜ್ಯ ಸರ್ಕಾರದ ಈ ಕ್ರಮ ಇತರ ರಾಜ್ಯಗಳಿಗೂ ಮಾದರಿಯಾಗಲಿ ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಗಾಯಕ್ಕೆ ಮದ್ದು ಹಚ್ಚಬೇಕೇ ಹೊರತು ಗಾಯವು ಗ್ಯಾಂಗ್ರೆನ್ ಆಗುವ ತನಕ ಕಾಯಬಾರದು. ಹಲವು ಮನವಿ, ಪತ್ರಗಳ ಬಳಿಕವೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿ, ಇದೀಗ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ, ಅತ್ಯಂತ ಅನಿವಾರ್ಯವಾಗಿ ಕೇವಲ 20 % ಪರಿಹಾರ ಮಾತ್ರ ನೀಡಿ ದೊಡ್ಡ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇಷ್ಟು ದಿನ ಬರ ಪರಿಹಾರ ವಿಚಾರವಾಗಿ ತುಟಿ ಪಿಟಿಕ್ ಎನ್ನದ ರಾಜ್ಯದ ಬಿಜೆಪಿ ನಾಯಕರು ಈಗ ಮೋದಿಯವರು ಕೊಟ್ಟ ದೊಡ್ಡ ಉಡುಗೊರೆ ಎಂದು ಪ್ರಚಾರ ನಡೆಸುತ್ತಿದ್ದಾರೆ. ಈ ಬಿಜೆಪಿಗರಿಗೆ ಕನಿಷ್ಠ ಮಾನ ಮರ್ಯಾದೆಯೂ ಇಲ್ಲವೇ? ಬರ ಪರಿಹಾರ ಕೊಡಿ ಎಂದು ಒಬ್ಬನೇ ಒಬ್ಬ ಬಿಜೆಪಿ ಸಂಸದ ಬಾಯಿ ಬಿಟ್ಟು ಕೇಳಿದ ಉದಾಹರಣೆ ಇದೆಯೇ? ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬಳಿಕ ಒಂದು ವಾರ ಸಮಯಾವಕಾಶ ತೆಗೆದುಕೊಂಡ ಮೋದಿ ಸರ್ಕಾರ ಕೊನೆಗೂ ಅತ್ಯಲ್ಪ ಬರ ಪರಿಹಾರ ಬಿಡುಗಡೆ ಮಾಡಿದೆ. ಅದನ್ನು ಯಾವ ಭಂಡ ಬಾಯಿಯಲ್ಲಿ ಮೋದಿಯವರ ಕೊಡುಗೆ ಎಂದು ಬಿಂಬಿಸುತ್ತೀರಿ? ಎಂದು ಮುಖ್ಯಮಂತ್ರಿ ಚಂದ್ರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.










