ಬೆಂಗಳೂರು ವ್ಯಾಪ್ತಿಯ ತ್ರಿತಾರಾ ಹಾಗೂ ಪಂಚತಾರಾ ಸೇರಿದಂತೆ ಒಟ್ಟು 26 ತಾರಾ ಹೋಟೆಲ್ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಹೋಟೆಲ್ಗಳಲ್ಲಿ ಅವಧಿ ಮೀರಿದ ಆಹಾರ, ಮಾಂಸ, ಕೊಳೆತ ತರಕಾರಿ ಸೇರಿದಂತೆ ಗಂಭೀರ ಲೋಪಗಳು ಪತ್ತೆಯಾಗಿವೆ.ತಪಾಸಣೆ ವೇಳೆ ಕೆಲವು ಹೋಟೆಲ್ಗಳಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು, ಅಡುಗೆಮನೆ ಹಾಗೂ ಆಹಾರ ಸಂಗ್ರಹಣಾ ಸ್ಥಳಗಳಲ್ಲಿ ಸ್ವಚ್ಛತೆ ಕೊರತೆ, ಅವಧಿ ಮೀರಿದ ಉತ್ಪನ್ನಗಳ ಬಳಕೆ, ಲೇಬಲ್ ಇಲ್ಲದ ಮಾಂಸ ಉತ್ಪನ್ನಗಳು ಹಾಗೂ ತರಕಾರಿಗಳ ಮೇಲೆ ಶಿಲೀಂಧ್ರ ಬೆಳೆದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಲೋಪಗಳು ಕಂಡುಬಂದಿರುವ ಹೋಟೆಲ್ಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಸಂಬಂಧಪಟ್ಟವರ ವಿರುದ್ಧ ನ್ಯಾಯ ನಿರ್ಣಾಯಕ ಅಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಶಿಫಾರಸು ಮಾಡಲಾಗಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.ತಪಾಸಣೆಯ ವೇಳೆ ದಿ ಲಲಿತ್ ಅಶೋಕ್ ಹೋಟೆಲ್ನಿಂದ 76 ಕೆ.ಜಿ. ಮಾಂಸ, 200 ಕೆ.ಜಿ. ತರಕಾರಿ ಹಾಗೂ 32 ಲೀಟರ್ ಅವಧಿ ಮೀರಿದ ಹಾಲು ವಶಪಡಿಸಿಕೊಳ್ಳಲಾಗಿದೆ. ಅವಧಿ ಮೀರಿದ ಹಾಲನ್ನು ನಾಶಪಡಿಸಲಾಗಿದೆ.

ಇನ್ನು ಶಾಂಗ್ರಿ-ಲಾ ಹೋಟೆಲ್ನಲ್ಲಿ 15 ಕೆ.ಜಿ. ಮಾಂಸ, ಫೋರ್ ಸೀಸನ್ಸ್ ಹೋಟೆಲ್ನಲ್ಲಿ 19 ಕೆ.ಜಿ. ಮಾಂಸ ಹಾಗೂ ತಾಜ್ ವಿವಾಂತ ವೈಟ್ಫೀಲ್ಡ್ನಲ್ಲಿ 3 ಕೆ.ಜಿ. ಅವಧಿ ಮೀರಿದ ಬೇಕರಿ ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ.ಯಶವಂತಪುರದ ತಾಜ್ ಹೋಟೆಲ್ನಲ್ಲಿ 72 ಕೆ.ಜಿ. ಮಾಂಸ ಹಾಗೂ ಸಾಲಮನ್ ಮೀನು ವಶಪಡಿಸಿಕೊಳ್ಳಲಾಗಿದೆ. ಏಟ್ರಿಯಾ ಹೋಟೆಲ್ನಲ್ಲಿ ಒಟ್ಟು 105 ಕೆ.ಜಿ. ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿದ್ದು, ಇದರಲ್ಲಿ 50 ಕೆ.ಜಿ. ಕೋಳಿ ಮಾಂಸ, 25 ಕೆ.ಜಿ. ಮಾಂಸ, 23 ಕೆ.ಜಿ. ಮೀನು ಹಾಗೂ 7 ಕೆ.ಜಿ. ತರಕಾರಿ ಸೇರಿದೆ. ವಶಪಡಿಸಿಕೊಂಡ ಆಹಾರ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

ಹಲವು ಹೋಟೆಲ್ಗಳ ಅಡುಗೆಮನೆ ಮತ್ತು ಆಹಾರ ಸಂಗ್ರಹಣಾ ಸ್ಥಳಗಳಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದೆ. ಎಫ್ಎಸ್ಎಸ್ಎಐ ನಿಯಮಗಳಿಗೆ ಅನುಗುಣವಾದ ಲೇಬಲಿಂಗ್ ಇಲ್ಲದ ಮಾಂಸ ಉತ್ಪನ್ನಗಳು, ಅವಧಿ ಮೀರಿದ ಹಾಲು ಮತ್ತು ಹಾಲಿನ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಕೋಳಿ ಮಾಂಸ, ಮೀನು ಹಾಗೂ ತರಕಾರಿಗಳನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ.ಕೆಲವು ಆಹಾರ ಪದಾರ್ಥಗಳು ಮತ್ತು ತರಕಾರಿಗಳಲ್ಲಿ ಶಿಲೀಂಧ್ರವೂ ಕಂಡುಬಂದಿದೆ. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಆಹಾರಗಳನ್ನು ಸೂಕ್ತ ರೀತಿಯಲ್ಲಿ ಪ್ರತ್ಯೇಕವಾಗಿ ಸಂಗ್ರಹಿಸಲಾಗಿದೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ.
ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ತಾರಾ ಹೋಟೆಲ್ಗಳಲ್ಲಿ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟ ಪರಿಶೀಲಿಸಲು ದಾಳಿ ನಡೆಸಲಾಗಿದೆ. ಲೋಪಗಳು ಪತ್ತೆಯಾದ ಹೋಟೆಲ್ಗಳಿಗೆ ನೋಟಿಸ್ ನೀಡಲಾಗಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗಂಭೀರ ಸ್ವರೂಪದ ಲೋಪಗಳು ಕಂಡುಬಂದರೆ ಹೋಟೆಲ್ಗಳ ಆಹಾರ ಪರವಾನಗಿಯನ್ನೇ ರದ್ದುಪಡಿಸುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಮಾತನಾಡಿ, ತಾರಾ ಹೋಟೆಲ್ಗಳಲ್ಲಿ ಗುಣಮಟ್ಟ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿಂದ ಜನರು ಅಲ್ಲಿಗೆ ತೆರಳುತ್ತಾರೆ. ಆದರೆ, ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ನೈಜ ಸ್ಥಿತಿ ಜನರಿಗೆ ತಿಳಿಯಬೇಕು. ಜನರ ಆರೋಗ್ಯ ರಕ್ಷಣೆಯೇ ಸರ್ಕಾರದ ಪ್ರಮುಖ ಉದ್ದೇಶ ಎಂದು ಹೇಳಿದ್ದಾರೆ.






