ಮೈಸೂರು:ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ.
ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ.
ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ.ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ.
ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ.ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು.ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.
ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ.
ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.
ಐದು ದೇವಾಲಯ ಸಮೂಹದ ಜೀರ್ಣೋದ್ಧಾರ:ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.