ಬೆಂಗಳೂರು: ಮೂರು ಸಾವಿರ ಜನಸಂಖ್ಯೆಯುಳ್ಳ ಗ್ರಾಮ ಪಂಚಾಯಿತಿಗಳಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಂದೆಡೆ ಗ್ಯಾರಂಟಿ ಹೆಸರಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡಂತಿದೆ ಎಂದು ಕಿಡಿಕಾರಿದ್ದಾರೆ.