ಬೆಳಗಾವಿ: ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಸುದೀರ್ಘವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಸಚಿವೆಯಾಗಿ ಮೂರು ವರ್ಷಗಳ ಕಾಲ ಅವಕಾಶ ನೀಡಿದ ಪಕ್ಷಕ್ಕೆ ಧನ್ಯವಾದ ಸಲ್ಲಿಸುವುದರೊಂದಿಗೆ, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿರುವ ಅವರು, “ನಾನು ಪಕ್ಷದ ಶಿಸ್ತಿನ ಸಿಪಾಯಿ. ಅವಕಾಶ ಕೊಟ್ಟರೂ, ಕೊಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಮಂತ್ರಿಮಂಡಲ ರಚನೆಯಾದ ಮೊದಲ ದಿನದಿಂದ ಇಲ್ಲಿಯವರೆಗೆ ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡಲು ನನಗೆ ಅವಕಾಶ ಮಾಡಿಕೊಟ್ಟ ಸಿದ್ದರಾಮಯ್ಯ ಅವರಿಗೆ ಮೊದಲನೆಯದಾಗಿ ಧನ್ಯವಾದ ಹೇಳುತ್ತೇನೆ. ನನ್ನ ಇಲಾಖೆಯಲ್ಲಿ ಸಾಧ್ಯವಾದಷ್ಟು ಉತ್ತಮ ಕೆಲಸ ಮಾಡುವ ಪ್ರಯತ್ನ ಮಾಡಿದ್ದೇನೆ. ಮುಂದೆ ಪಕ್ಷ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಅವಕಾಶ ಕೊಡದೇ ಇದ್ದರೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ” ಎಂದರು.

ಸಚಿವ ಸ್ಥಾನ ಮುಂದುವರಿಸುವಂತೆ ತಾವು ಯಾರನ್ನೂ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಹೆಬ್ಬಾಳ್ಕರ್, “ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುವ ಪ್ರಶ್ನೆಯೇ ಇಲ್ಲ. ರಾಜಕಾರಣದಲ್ಲಿ ಇವೆಲ್ಲವೂ ಸಹಜ. ರಾಜಕಾರಣ ಅನ್ನೋದು ಯಾವಾಗ ಏನು ಬೇಕಾದರೂ ಆಗಬಹುದಾದ ಕ್ಷೇತ್ರ. ಎಲ್ಲವೂ ಅನಿಶ್ಚಿತ” ಎಂದು ಹೇಳಿದರು.

ಮಹಿಳೆಯರಿಲ್ಲದ ಸಂಪುಟ ಅಪೂರ್ಣ
“ಮಹಿಳೆಯರಿಲ್ಲದ ಸಂಪುಟ ಅಪೂರ್ಣ ಎನ್ನುವುದು ನನ್ನ ಅಭಿಪ್ರಾಯ. ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು. ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರ ಸಮಸ್ಯೆಗಳನ್ನು, ಅವರ ನೋವು-ನಲಿವುಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಮಹಿಳೆಯರಿಗೆ ನ್ಯಾಯ ಸಿಗಬೇಕು, ಅವರ ಧ್ವನಿ ಸರ್ಕಾರದಲ್ಲಿ ಇರಬೇಕು. ಜಾರ್ಖಂಡ್, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ಸರ್ಕಾರಗಳಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಕರ್ನಾಟಕದಲ್ಲಿ ಏನೋ ಒಂದು ರೀತಿಯ ಲೆಕ್ಕಾಚಾರದಲ್ಲಿ ಈ ಬಾರಿ ಬದಲಾವಣೆ ಆಗಿದೆ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಈ ವಿಚಾರದಲ್ಲಿ ನಾನು ಯಾವುದೇ ರೀತಿಯ ತೀಕ್ಷ್ಣ ಹೇಳಿಕೆ ನೀಡಲು ಹೋಗುವುದಿಲ್ಲ. ಮುಖ್ಯಮಂತ್ರಿಗಳು ಕೂಡ ಆದಷ್ಟು ಶೀಘ್ರದಲ್ಲಿ ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೇಳಿದ್ದಾರೆ. ಆ ನಿರ್ಧಾರವನ್ನು ನಾವು ನೋಡೋಣ ” ಎಂದರು.

“ಪಕ್ಷದಲ್ಲಿ ಜವಾಬ್ದಾರಿ ನೀಡುವಾಗ ಪ್ರಾದೇಶಿಕತೆ, ಸಾಮಾಜಿಕ ಸಮೀಕರಣ, ಅನುಭವ, ಪಕ್ಷಕ್ಕೆ ಸಲ್ಲಿಸಿದ ಸೇವೆ ಸೇರಿದಂತೆ ಹಲವು ಮಾನದಂಡಗಳನ್ನು ನೋಡಲಾಗುತ್ತದೆ. ಯಾವ ಮಾನದಂಡದಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎನ್ನುವುದು ಪಕ್ಷದ ನಿರ್ಧಾರ. ನನಗೆ ಮೂರು ವರ್ಷಗಳ ಕಾಲ ಅವಕಾಶ ಸಿಕ್ಕಿದೆ. ಆ ಮೂರು ವರ್ಷಗಳಲ್ಲಿ ನನ್ನ ಇಲಾಖೆಯಲ್ಲಿ ಬಹಳ ಒಳ್ಳೆಯ ಕೆಲಸ ಮಾಡಿದ್ದೇನೆ ಎನ್ನುವ ತೃಪ್ತಿ ನನಗಿದೆ”

“ನನ್ನನ್ನು ಮಂತ್ರಿ ಮಾಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ. ರಾಜಕಾರಣದಲ್ಲಿ ಯಾರು ಯಾವ ಸ್ಥಾನಕ್ಕೆ ಹೋಗಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅಂತಹ ವಿಚಾರದಲ್ಲಿ ನಾನು ಯಾವುದೇ ರೀತಿಯ ಒತ್ತಡ ಅಥವಾ ಬೇಡಿಕೆ ಇಡುವುದಿಲ್ಲ. ಈಗ ಮುಖ್ಯಮಂತ್ರಿಗಳಿದ್ದಾರೆ. ಅವರ ನಾಯಕತ್ವದಲ್ಲಿ ನಾನು ನನ್ನಿಂದಾಗುವ ಕೆಲಸವನ್ನು ಮಾಡುತ್ತೇನೆ” ಎಂದು ಹೇಳಿದರು.

ರಾಜ್ಯಾದ್ಯಂತ ಪಕ್ಷ ಸಂಘಟನೆ
.
“ಇನ್ನು ಮುಂದೆಯೂ ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಅಥವಾ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗಿರುವುದಿಲ್ಲ. ಈ ಹಿಂದೆ ಹೇಗೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೋ, ಅದೇ ರೀತಿಯಲ್ಲಿ ಮುಂದೆಯೂ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡುತ್ತೇನೆ. ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಚೌಕಟ್ಟಿನಲ್ಲಿ ಇದ್ದುಕೊಂಡು ಕೆಲಸ ಮಾಡುವುದು ನನ್ನ ಜವಾಬ್ದಾರಿ. ರಾಜಕಾರಣದಲ್ಲಿ ನಾಯಕರಿಗೆ ಒಮ್ಮೊಮ್ಮೆ ಪರೀಕ್ಷೆಯ ಸಂದರ್ಭ ಬರುತ್ತದೆ. ಅದು ಒಂದು ರೀತಿಯ ಅಗ್ನಿಪರೀಕ್ಷೆ. ಆ ಸಂದರ್ಭದಲ್ಲಿ ನಾವು ತಾಳ್ಮೆಯಿಂದ ಇರಬೇಕು. ಪಕ್ಷದ ಚೌಕಟ್ಟಿನಲ್ಲಿ, ಪಕ್ಷದ ಶಿಸ್ತಿನಲ್ಲಿ ಇದ್ದರೆ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಅವಕಾಶಗಳು ಬರುತ್ತವೆ” ಎಂದು ಭರವಸೆಯ ಮಾತುಗಳನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.







