ಜಮ್ಮುಕಾಶ್ಮೀರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ ಕೇಳಿಬಂದಿದೆ. ಕಣಿವೆ ಪ್ರದೇಶದಲ್ಲಿನ ಸಿದ್ರಾ ಏರಿಯಾದಲ್ಲಿ ಅತ್ಯಾಧುನಿಕ ಶಸ್ತ್ರಗಳೊಂದಿಗೆ ಲಗ್ಗೆ ಇಟ್ಟಿದ್ದ ಭಯೋತ್ಪಾದಕರನ್ನು ಭಾರತೀಯ ಸೇನೆ ಬೇಟೆಯಾಡಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಎಡಿಜಿಪಿ ಮುಕೇಶ್ ಸಿಂಗ್, ಮೂವರು ಉಗ್ರರು ಈ ಸ್ಥಳದಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಸೇನೆ ಹಾಗೂ ಸಿಆರ್ಪಿಎಫ್ ಯೋಧರು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸದ್ಯಕ್ಕೆ ಎನ್ ಕೌಂಟರ್ ಕಾರ್ಯಾಚರಣೆ ಮುಕ್ತಾಯವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.