ರಾಜ್ಯದಲ್ಲಿ ಎಲ್ಲಾ ನಾಮಫಲಕಗಳು (Name boards),ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಲ್ಲಿ ಶೇಕಡ 60ರಷ್ಟು ಕನ್ನಡ (Kannada) ಕಡ್ಡಾಯವಾಗಿ ಇರಬೇಕೆಂದು ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿದೆ. ಆದ್ರೆ ಈ ನಿಯಮ ಸಂಪೂರ್ಣವಾಗಿ ಅನುಷ್ಠಾನವಾಗಿಲ್ಲ. ಇದರ ನಡುವೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನ ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini rajanesh) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಆಡಳಿತದಲ್ಲಿ ಕನ್ನಡವನ್ನ ಕಡ್ಡಾಯವಾಗಿ ಬಳಸುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ಮುಂದೆ ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಎಲ್ಲಾ ಸರ್ಕಾರದ ಆದೇಶಗಳನ್ನ ಕನ್ನಡದಲ್ಲಿ ಹೊರಡಿಸಲು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.