
ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನರ ಗಮನ ಸೆಳೆಯುತ್ತಿರುವುದೆಂದರೆ, ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಏರ್ಪಡಿಸಿರುವ `ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Sivakumar)ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil)ಜತೆಯಾಗಿ ಬುಧವಾರ ಚಾಲನೆ ನೀಡಿದರು.

ಬಳಿಕ ಶಿವಕುಮಾರ್(Sivakumar) ಮತ್ತು ಪಾಟೀಲ(Patil) ಇಬ್ಬರೂ ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜತೆಗೆ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ ಎನ್ನಲಾಗುತ್ತಿರುವ ಅಗ್ರಿ-ಟೆಕ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಮತ್ತು ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ಅವರು ತಿಳಿದುಕೊಂಡರು.
ಪ್ರದರ್ಶನ ಕುರಿತು ಮಾತನಾಡಿದ ಸಚಿವ ಎಂ ಬಿ ಪಾಟೀಲ(MB Patil), `ಇದರಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು’ ಎಂದರು.

ಮುಖ್ಯವಾಗಿ ಇಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಮತ್ತು ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಪಾಲ್ಗೊಂಡಿವೆ. ಜೊತೆಗೆ ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್’ ಕೂಡ ಇದೆ. ಪಾಲ್ಗೊಂಡಿರುವ ಕಂಪನಿಗಳಲ್ಲಿ ಜಿ.ಇ ಹೆಲ್ತ್ ಕೇರ್, ಹೀರೋ ಫ್ಯೂಚರ್ ಎನರ್ಜೀಸ್, ರಿವರ್ ಮೊಬಿಲಿಟಿ, ಸರಳಾ ಏವಿಯೇಶನ್, ಗೆಲಾಕ್ಸಿ ಸ್ಪೇಸ್, ಲ್ಯಾಮ್ ರೀಸರ್ಚ್ ಪ್ರಮುಖವಾಗಿವೆ.
ಕರ್ನಾಟಕ ಪೆವಿಲಿಯನ್’ನಲ್ಲಿ ಕ್ವಿನ್ ಸಿಟಿ, ಫ್ಲೈಯಿಂಗ್ ವೆಡ್ಜ್, ಬೆಲ್ಲಾಟ್ರಿಕ್ಸ್, ಸ್ಕೀಸರ್ವ್, ಫ್ಲಕ್ಸ್ ಆಟೋ ಮುಂತಾದ ಉದ್ಯಮಗಳಿವೆ.
