ರಾಜಸ್ಥಾನ ಕಾಂಗ್ರೆಸ್ ಬಣದಲ್ಲಿ ಉಂಟಾದ ಭಿನ್ನಮತದಿಂದ ತೀವ್ರ ಮುಜುಗರಕ್ಕೆ ಒಳಗಾದ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ.
ರಾಜಸ್ಥಾನದಲ್ಲಿ ಸಿಎಂ ಸ್ಥಾನಕ್ಕಾಗಿ ನಡೆದ ಮನಸ್ತಾಪದಿಂದ ಹಲವಾರು ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಹಿನ್ನಡೆ ಆಗಬಹುದು ಎಂಬ ಕಾರಣಕ್ಕೆ ಅಶೋಕ್ ಗೆಹ್ಲೋಟ್ ಅಧ್ಯಕ್ಷ ಸ್ಥಾನದ ರೇಸ್ ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಿಂತ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನ ಹಾಗೂ ರಾಜ್ಯ ರಾಜಕೀಯದಲ್ಲೇ ಹೆಚ್ಚು ಆಸಕ್ತಿ ಹೊಂದಿರುವ ಕಾರಣ ಗೆಹ್ಲೋಟ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಗೆಹ್ಲೋಟ್ ಹಿಂದೆ ಸರಿದಿದ್ದರಿಂದ ಹಲವು ಹಿರಿಯ ನಾಯಕರು ಆಸಕ್ತಿ ತೋರಿಸಿದ್ದು, ಶಶಿ ತರೂರ್ ಅಲ್ಲದೇ ಹಲವು ಆಸಕ್ತರು ಸೆಪ್ಟೆಂಬರ್ 30ರೊಳಗೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ, ದಿಗ್ವಿಜಯ್ ಸಿಂಗ್, ಮುಕುಲ್ ಸಿಂಗ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಸಕ್ತಿ ವಹಿಸಿದ್ದು, ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದಕ್ಕೂ ಮುನ್ನ ರಾಜಸ್ಥಾನದ ಬಿಕ್ಕಟ್ಟು ಬಗೆಹರಿಸಲು ಕಮಲ್ ನಾಥ್ ಅವರನ್ನು ಸಂಧಾನಕಾರರಾಗಿ ಕಾರ್ಯ ನಿರ್ವಹಿಸಲು ಕಳುಹಿಸಿಕೊಡಲಾಯಿತು. ಕಾಂಗ್ರೆಸ್ ನಲ್ಲಿ ಯಾವುದೇ ಹುದ್ದೆ ವಹಿಸಿಕೊಳ್ಳದೇ ಇರಲು ನಿರ್ಧರಿಸಿರುವ ಗಾಂಧಿ ಕುಟುಂಬ ಈ ಪ್ರಕರಣದಲ್ಲೂ ಹಸ್ತಕ್ಷೇಪ ಮಾಡದೇ ದೂರ ಉಳಿದಿದೆ.