ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಎಕ್ಸ್ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ (ಆಗಸ್ಟ್ 3) ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜತೆ ಬುಧವಾರ ಚರ್ಚೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಸ್ತ್ರತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ” ಎಂದು ಹೇಳಿದರು.
“ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದೆ. ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವರ ಜತೆ ಚರ್ಚಿಸಿದ್ದೇನೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
“ಸುರಂಗ ರಸ್ತೆ, ಫೈ ಓವರ್ ಅಥವಾ ಇತರೆ ಮಾದರಿ ಯೋಜನೆ ಜಾರಿ ಮಾಡಲು ವಿಸ್ಕೃತ ಯೋಜನಾ ವರದಿ ಸಿದ್ಧಪಡಿಸಲು ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈಗಾಗಲೇ ಜುಲೈ 14 ರಿಂದ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬಿಬಿಎಂಪಿಯಿಂದ ಎಕ್ಸ್ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆದಿದ್ದೇವೆ. ಆಗಸ್ಟ್ 8 ರಂದು ಕೊನೆಯ ದಿನವಾಗಿದೆ” ಎಂದು ಶಿವಕುಮಾರ್ ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಖರ್ಗೆ ಮೈಬಣ್ಣ ಅವಹೇಳನ | ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ದೂರು
ಸಂಚಾರ ದಟ್ಟಣೆ ನಿಯಂತ್ರಣ ಮಾಡಿ ಬೆಂಗಳೂರಿನ ಚಿತ್ರಣ ಬದಲಿಸಬೇಕಿದೆ. ದೆಹಲಿ, ಮುಂಬೈ ನಗರಗಳಲ್ಲೂ ಸಂಚಾರ ದಟ್ಟಣೆ ಹೆಚ್ಚಾಗಿದ್ದರೂ, ಬೆಂಗಳೂರನ್ನು ಜಾಗತಿಕ ನಗರ ಎಂದು ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಕೇವಲ ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಮಾತ್ರ ಹೆಚ್ಚಾಗಿ ಮಾತನಾಡುತ್ತಾರೆ ಎಂದು ಹೇಳಿದರು.
“ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲು ನಾವು ಸಜ್ಜಾಗುತ್ತಿದ್ದೇವೆ. ಈಗಾಗಲೇ ಚೀನಾ, ಸಿಂಗಾಪುರ, ಇಸ್ರೇಲ್ ಸೇರಿದಂತೆ ಹತ್ತಾರು ಕಂಪನಿಗಳು ಬಂದು ತಮ್ಮ ವಿಚಾರ ತಿಳಿಸಿವೆ. ಈ ಕಂಪನಿಗಳಿಗೆ ಈಗಾಗಲೇ ಎಕ್ಸ್ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಕರೆಯಲಾಗಿರುವ ಟೆಂಡರ್ನಲ್ಲಿ ಭಾಗವಹಿಸಿ, ಇಡೀ ಯೋಜನೆ ಹೇಗೆ ಜಾರಿ ಮಾಡಬಹುದು ಎಂದು ವಿವರಿಸುವಂತೆ ತಿಳಿಸಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದರು.