ಬೆಂಗಳೂರು: ಕರ್ನಾಟಕದಲ್ಲಿ H1N1 (ಇನ್ಫ್ಲುಯೆಂಜಾ ಎ) ಹಂದಿ ಜ್ವರದ ಸೋಂಕಿನ ಪ್ರಕರಣಗಳು 4,000ರ ಗಡಿ ದಾಟಿವೆ ಎಂದು ವರದಿಯಾಗಿದ್ದು, ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಹವಾಮಾನ ಬದಲಾವಣೆ ಸೇರಿದಂತೆ ಹಲವು ಕಾರಣಗಳಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಹಾಗೂ ಪರೀಕ್ಷಾ ಕಿಟ್ಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೂ ತೀವ್ರ ಜ್ವರ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ದೇಹನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಸೋಂಕಿನ ಲಕ್ಷಣ ಕಾಣಿಸಿಕೊಂಡವರು ಸ್ವಯಂ ಔಷಧ ಸೇವನೆ ಮಾಡದೆ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು. ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುವ ಮೂಲಕ ಸೋಂಕಿನಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಅಗತ್ಯವಿದ್ದಲ್ಲಿ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.







