ರಾಜ್ಯ ಸರ್ಕಾರದ ಪ್ರಮುಖ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಇಂದು ಚಾಲನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ.
ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ.
ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ.
ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ ಸಮಾಜ ಸ್ಥಾಪನೆ” ಎಂದು ಹೇಳುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.






