ಬೆಂಗಳೂರು: ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಿಷ್ಟು ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಗೃಹ ಲಕ್ಷ್ಮಿ ಯೋಜನೆ ಬಳಿಕ ಇದೀಗ ಗೃಹ ಜ್ಯೋತಿ ಯೋಜನೆಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಅನರ್ಹ ಫಲಾನುಭವಿಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ ಇಂದಿನಿಂದ (ಜುಲೈ 1) ಆರಂಭವಾಗಿದೆ. ರಾಜ್ಯದ ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮತ್ತು ಮೀಟರ್ ರೀಡರ್ಗಳು ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಿದ್ದಾರೆ.

2023ರ ಜುಲೈನಲ್ಲಿ ಜಾರಿಗೆ ಬಂದಿದ್ದ ಗೃಹಜ್ಯೋತಿ ಯೋಜನೆಯ ಪುನರ್ ಪರಿಶೀಲನೆಯ ಭಾಗವಾಗಿ ಈ ಕಾರ್ಯ ನಡೆಯುತ್ತಿದೆ. ಸಿಬ್ಬಂದಿ ಮೊಬೈಲ್ ಆಪ್ ಮತ್ತು ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಿದ್ದಾರೆ. ಪರಿಶೀಲನೆ ವೇಳೆ ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ ಬಾಡಿಗೆ ಒಪ್ಪಂದ ಪತ್ರವನ್ನು ತೋರಿಸಲು ಸೂಚಿಸಲಾಗಿದೆ.

ಸ್ಥಳದಲ್ಲೇ ಮೀಟರ್ ರೀಡರ್ಗಳ ಮೂಲಕವೇ ಪರಿಶೀಲನೆ ನಡೆಯುವುದರಿಂದ ಗ್ರಾಹಕರು ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಮನವಿ ಮಾಡಿದೆ. ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ ಈ ಪರಿಶೀಲನಾ ಕಾರ್ಯ ನಡೆಯಲಿದೆ.






