ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು, ಸುಮಾರು ಆರು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ. ಇದೇ ವೇಳೆ, ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ತಾಂಗರುನ ದೊಡ್ಡಿ ನಿವಾಸಿ ರಾಜು ಎಂಬಾತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಘಟನೆ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ಮತ್ತು ಹತ್ಯೆ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಮೀರಿಸಿ, ಮತ್ತೊಂದು ಆಘಾತಕಾರಿ ಪ್ರಕರಣ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಎಂಬಾತ ತನ್ನ ಆರು ವರ್ಷದ ಮಗ ಸಿದ್ಧಾರ್ಥ್ನನ್ನು ಕೃಷ್ಣಾ ನದಿಗೆ ಎಸೆದು ಕೊಲೆ ಮಾಡಿದ ಘಟನೆ ಬಹಿರಂಗವಾಗಿದೆ.ಮಗು ತನ್ನ ಹೋಲಿಕೆಯಲ್ಲಿಲ್ಲ ಎಂಬ ಅನುಮಾನದಿಂದ ಕಳೆದ ಒಂದೂವರೆ ವರ್ಷಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಇದೇ ಅನುಮಾನ ಕೊನೆಗೆ ಕ್ರೂರ ಹತ್ಯೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 16 ರಂದು ಮಗನನ್ನು ಶಾಲೆಗೆ ಸೇರಿಸುವ ನೆಪದಲ್ಲಿ ಹೊರಗೆ ಕರೆದುಕೊಂಡು ಹೋಗಿದ್ದ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಬಳಿ ಕೃಷ್ಣಾ ನದಿಗೆ ಮಗುವನ್ನು ತಳ್ಳಿದ್ದಾನೆ.
ಮಾರ್ಚ್ 18 ರಂದು ನದಿಯಲ್ಲಿ ಮಗುವಿನ ಶವ ಪತ್ತೆಯಾಗಿದ್ದರೂ, ಆರೋಪಿಯು ಮಗನನ್ನು ಹಾಸ್ಟೆಲ್ಗೆ ಸೇರಿಸಿದ್ದೇನೆ ಎಂದು ಕುಟುಂಬದವರನ್ನು ತಪ್ಪು ದಾರಿಗೆಳೆದುಕೊಂಡಿದ್ದ. ಬಳಿಕ ಏಪ್ರಿಲ್ 1 ರಂದು ಮಗನ ಹುಟ್ಟುಹಬ್ಬದಂದು ಅನುಮಾನಗೊಂಡ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ವೇಳೆ ಮೊಬೈಲ್ ಲೊಕೇಶನ್ ಆಧಾರವಾಗಿ ಸತ್ಯ ಹೊರಬಂದಿದೆ.ಪೊಲೀಸರ ವಿಚಾರಣೆಯಲ್ಲಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಇದೀಗ ಬಂಧನದಲ್ಲಿದ್ದಾನೆ. ಈ ಘಟನೆ ನಾಗಠಾಣೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಜಿಲ್ಲೆಯಲ್ಲಿನ ಈ ಸರಣಿ ಅಪರಾಧ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.






