ನವದೆಹಲಿ: ಹಿಸ್ಸಾರ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಸ್ವತಂತ್ರ ಶಾಸಕಿ ಸಾವಿತ್ರಿ ಜಿಂದಾಲ್ ಅವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ.ಬಿಜೆಪಿಯ ಹಾಲಿ ಸಂಸದ ನವೀನ್ ಜಿಂದಾಲ್ ಅವರ ತಾಯಿ ಸಾವಿತ್ರಿ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಕೇಸರಿ ಪಕ್ಷಕ್ಕೆ ತಮ್ಮ ಬೆಂಬಲವನ್ನು ಘೋಷಿಸಿದರು. ಕುರುಕ್ಷೇತ್ರದ ಸಂಸದ ನವೀನ್ ಜಿಂದಾಲ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
“ನನಗೆ ಹಿಸಾರ್ನ ಅಭಿವೃದ್ಧಿ ಬೇಕು ಮತ್ತು ಆದ್ದರಿಂದ ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ” ಎಂದು ಸಾವಿತ್ರಿ ಜಿಂದಾಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಹರಿಯಾಣದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಹರಿಯಾಣದಲ್ಲಿ ಕೇಸರಿ ಪಕ್ಷ ಮೂರನೇ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. 90 ಸದಸ್ಯ ಬಲದ ಸದನದಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ 37 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇನ್ನು ಇಬ್ಬರು ಪಕ್ಷೇತರ ಶಾಸಕರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಸಾವಿತ್ರಿ ಮತ್ತು ನವೀನ್ ಜಿಂದಾಲ್ 2024 ರ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಆದರೆ ಕೇಸರಿ ಪಕ್ಷವು ಸಾವಿತ್ರಿ ಜಿಂದಾಲ್ಗೆ ಟಿಕೆಟ್ ನಿರಾಕರಿಸಿದ್ದರಿಂದ, ಅವರು 2024 ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ವಿಜಯಶಾಲಿಯಾದರು. ಸಾವಿತ್ರಿ ಜಿಂದಾಲ್ ಅವರು 2005 ಮತ್ತು 2009 ರ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿಸಾರ್ ನಿಂದ ಗೆದ್ದಿದ್ದರು.
ತಾಯಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ನವೀನ್ ಜಿಂದಾಲ್ ಹೇಳಿದ್ದಾರೆ. ಸಾವಿತ್ರಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ನವೀನ್ ಜಿಂದಾಲ್, “ನಾವು ಅದರ ಬಗ್ಗೆ ಮಾತನಾಡಲಿಲ್ಲ ಮತ್ತು ಮುಖ್ಯಮಂತ್ರಿ (ನಯಾಬ್ ಸಿಂಗ್ ಸೈನಿ) ಅದರ ಬಗ್ಗೆ ನಿರ್ಧರಿಸುತ್ತಾರೆ. ಧರ್ಮೇಂದ್ರ ಪ್ರಧಾನ್ ಅವರು ಸಾವಿತ್ರಿ ಜಿಂದಾಲ್ ಅವರನ್ನು ಪಕ್ಷ ಗೌರವಿಸುತ್ತದೆ ಎಂದು ಭರವಸೆ ನೀಡಿದ್ದಾರೆ” ಎಂದು ನವೀನ್ ಹೇಳಿದರು.