ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿವಾಸದಲ್ಲಿ ನಿನ್ನೆ ತಡರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಸಭಾಪತಿ ಸ್ಥಾನ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ನಿಲುವಿನಲ್ಲಿ ಇದ್ದ ಬಸವರಾಜ್ ಹೊರಟ್ಟಿ ಅವರೊಂದಿಗೆ ಮುಖ್ಯಮಂತ್ರಿ ಸಂಧಾನ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಚುನಾವಣೆ, ಮುಂಬರುವ ಅಧಿವೇಶನದ ಕಾರ್ಯತಂತ್ರ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.
ಸಭೆಯಲ್ಲಿ ಕೆಲವು ನಾಯಕರು ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಲ್ಲೇ ಮುಂದುವರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್ ಹಾಗೂ ಎನ್.ಎ. ಹ್ಯಾರಿಸ್ ಅವರು ಹೊರಟ್ಟಿಯನ್ನು ಮುಂದುವರಿಸುವಂತೆ ಒತ್ತಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಪಕ್ಷದ ವರಿಷ್ಠರ ನಿರ್ಧಾರವನ್ನು ಬದಲಾಯಿಸಲು ಒಪ್ಪದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಸಹಕರಿಸುವಂತೆ ಹೊರಟ್ಟಿ ಅವರಿಗೆ ಮನವಿ ಮಾಡಿ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿಯಂತೆ, ಆಗಸ್ಟ್ 14ರಂದು ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಉಪಸಭಾಪತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನದಿಂದ ನಿರ್ಗಮಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯಿಂದ ವಿಧಾನ ಪರಿಷತ್ನಲ್ಲಿ ಹೊಸ ನಾಯಕತ್ವಕ್ಕೆ ದಾರಿ ತೆರೆಯುವ ಸಾಧ್ಯತೆ ಇದ್ದು, ಮುಂದಿನ ಅಧಿವೇಶನಕ್ಕೂ ಮುನ್ನ ರಾಜಕೀಯ ವಲಯದಲ್ಲಿ ಇನ್ನಷ್ಟು ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ.

ಇನ್ನು ನಿನ್ನೆಯ ಮಹತ್ವದ ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಯು.ಟಿ. ಖಾದರ್, ಹೆಚ್.ಸಿ. ಬಾಲಕೃಷ್ಣ, ಚಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಶಾಸಕರಾದ ಕುಣಿಗಲ್ ರಂಗನಾಥ್, ಶರತ್ ಬಚ್ಚೇಗೌಡ, ಕದಲೂರು ಉದಯ್, ಎನ್.ಎ. ಹ್ಯಾರಿಸ್ ಹಾಗೂ ವಿಧಾನ ಪರಿಷತ್ ಸದಸ್ಯ ವಿನಯ್ ಕಾರ್ತಿಕ್ ಭಾಗವಹಿಸಿದ್ದರು.






